ನವದೆಹಲಿ: ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್ಆರ್ಎ) ನಡೆಸುವ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ನೇತೃತ್ವದ ನಿಯೋಗ ಕೇಂದ್ರ ಸರ್ಕಾರವನ್ನು ಮಂಗಳವಾರ ಒತ್ತಾಯಿಸಿತು.
ಪ್ರಧಾನಿ ಮಂತ್ರಿ ಕಚೇರಿ ಸಚಿವ ಜಿತೇಂದ್ರ ಸಿಂಗ್ ಅವರಿಗೆ ನಿಯೋಗ ಮನವಿ ಸಲ್ಲಿಸಿತು.
‘ಪರೀಕ್ಷೆಗಳನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತಿದೆ. ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆಗಳನ್ನು ನಡೆಸಿದರೆ ಬಡ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದವರಿಗೂ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ’ ಎಂದು ನಿಯೋಗ ವಿವರಿಸಿತು.
ಸಾಹಿತಿಗಳಾದ ಮಲ್ಲೇಪುರಂ ಜಿ.ವೆಂಕಟೇಶ್, ಸಿ.ಮಂಜುಳಾ, ಎಚ್.ಜಿ.ಶೋಭಾ, ಅಶ್ವಿನಿ ಶಂಕರ್, ಎ.ಸಿ.ಕಿಶೋರ್, ಸುರೇಶ್ ಬಡಿಗೇರ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ನಿಯೋಗದಲ್ಲಿದ್ದರು.