ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.
ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ಜಾರಿ ನಿರ್ದೇಶನಾಲಯದ(ಇ.ಡಿ) ಪರ ಸಾಲಿಸಿಟರ್ ಜನರಲ್ ಎಸ್. ವಿ. ರಾಜು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಾಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿದೆ.
‘ನಾಳೆ ಇಲ್ಲದಿದ್ದರೆ ಗುರುವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳಬಹುದು. ಗುರುವಾರವಲ್ಲದಿದ್ದರೆ ಮುಂದಿನ ವಾರ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ’ ಎಂದು ಪೀಠ ತಿಳಿಸಿದೆ.
ಕೇಜ್ರಿವಾಲ್ ಬಂಧನ ವಿರುದ್ಧದ ಅರ್ಜಿಯನ್ನು ಪೀಠವು ಎರಡು ಭಾಗಗಳನ್ನಾಗಿ ವಿಂಗಡಿಸಿದ್ದು, ಪ್ರಮುಖ ಅರ್ಜಿಯು ಕೇಜ್ರಿವಾಲ್ ಬಂಧನವನ್ನು ಕಾನೂನುಬಾಹಿರ ಎಂದು ಹೇಳಿದರೆ, ಎರಡನೇ ಅರ್ಜಿಯು ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ನೀಡುವುದಕ್ಕೆ ಸಂಬಂಧಿಸಿದ್ದಾಗಿದೆ.
ಏತನ್ಮಧ್ಯೆ, ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.
ದೆಹಲಿ ಅಬಕಾರಿ ನೀತಿ ಜತೆಗೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಮಾರ್ಚ್ 21ರಂದು ಬಂಧಿಸಿತ್ತು. ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.