ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ಕಾಂಗ್ರೆಸ್ ಮೈತ್ರಿಯನ್ನು ಬಿಜೆಪಿ ಕಟುವಾಗಿ ಟೀಕಿಸಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ದೆಹಲಿ ಜನರೊಂದಿಗಿನ ಬಾಂಧವ್ಯವನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದೆ.
ದೆಹಲಿ ಜನರ ಬೆಂಬಲ ಇಲ್ಲ ಎಂಬುದನ್ನು ಎಎಪಿ ಮನಗಂಡಿದೆ. ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸುವ ಮೂಲಕ ದೆಹಲಿಯ ಜನರ ನಂಬಿಕೆಯನ್ನು ಕಳೆದುಕೊಂಡಿದೆ ಎಂದು ಆರೋಪಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ, ಎಎಪಿ-ಕಾಂಗ್ರೆಸ್ ಮೈತ್ರಿಯ ಹೊರತಾಗಿಯೂ ದೆಹಲಿಯ ಏಳು ಕ್ಷೇತ್ರಗಳಲ್ಲಿ ಕಮಲ ಪಕ್ಷವು ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಪರಸ್ಪರ ಭ್ರಷ್ಟರು ಎಂದು ಆರೋಪಿಸುತ್ತಿದ್ದ ಎಎಪಿ-ಕಾಂಗ್ರೆಸ್ ಇಂದು ಮೈತ್ರಿ ಮಾಡಿಕೊಂಡಿದೆ. ಇದರಿಂದ ಜನರು ಆಶ್ಚರ್ಯಚಕಿತಗೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ವಿರೋಧ ಪಕ್ಷಗಳ ಒಕ್ಕೂಟ 'ಇಂಡಿಯಾ'ದ ಭಾಗವಾಗಿರುವ ಎಎಪಿ ಹಾಗೂ ಕಾಂಗ್ರೆಸ್ ದೆಹಲಿಯಲ್ಲಿ ಮೈತ್ರಿ ಮಾಡುವ ವಿಚಾರವನ್ನು ಘೋಷಿಸಿತ್ತು. ಎಎಪಿ ನಾಲ್ಕು ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿದೆ.