ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವ ಸ್ಥಾನ ತ್ಯಜಿಸುವ ಬಗ್ಗೆ ಸ್ಪಷ್ಟನೆ ನೀಡಿದ ಸುರೇಶ್ ಗೋಪಿ: ಊಹಾಪೋಹಗಳಿಗೆ ತೆರೆ

Published 10 ಜೂನ್ 2024, 12:31 IST
Last Updated 10 ಜೂನ್ 2024, 12:31 IST
ಅಕ್ಷರ ಗಾತ್ರ

ನವದೆಹಲಿ: ಕೇರಳದ ಬಿಜೆಪಿ ಸಂಸದ, ಮಲಯಾಳಂ ನಟ ಸುರೇಶ್ ಗೋಪಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಬಯಸುತ್ತಿದ್ದಾರೆ ಎಂಬ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ಕೇರಳದಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟ ಸುರೇಶ್‌ ಗೋಪಿ ಅವರು ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕೇಂದ್ರ ಸಚಿವರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, ಚಿತ್ರರಂಗದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಅವರು ಸಚಿವ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನಾನು ಮೋದಿ ಸರ್ಕಾರದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಮಗಳು ತಪ್ಪು ಸುದ್ದಿಯನ್ನು ಹರಡುತ್ತಿವೆ. ಇದು ಊಹಾಪೋಹವಷ್ಟೇ, ಇದು ಸತ್ಯಕ್ಕೆ ದೂರವಾಗಿದೆ. ಮೋದಿ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡುವುದು ಮತ್ತು ಸಂಸತ್‌ನಲ್ಲಿ ಕೇರಳದ ಜನರನ್ನು ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಷಯ’ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ನಿಕಟವರ್ತಿ ಎಂದು ಗುರುತಿಸಿಕೊಂಡಿರುವ ಸುರೇಶ್‌ ಗೋಪಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಮುರಳೀಧರನ್ ವಿರುದ್ಧ 74,686 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಸದ್ಯ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸುರೇಶ್‌ ಗೋಪಿ ಅವರು ನಾಲ್ಕು ದೊಡ್ಡ ಬಜೆಟ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT