ಕೊಚ್ಚಿ: ಕೇರಳದಲ್ಲಿ ಇದೇ 31ರ ವರೆಗೆ ಪ್ರತಿಭಟನೆ, ಮೆರವಣಿಗೆ, ಆಂದೋಲನ, ಸಾರ್ವಜನಿಕ ಪ್ರದೇಶದಲ್ಲಿ ಗುಂಪುಗೂಡುವುದನ್ನು ನಿರ್ಬಂಧಿಸಿ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ಆದರೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಹೊರಡಿಸಿದ ಮಾರ್ಗಸೂಚಿಗಳಿಗೆ ಒಳಪಟ್ಟು ಪೂರ್ವಾನುಮತಿ ಪಡೆದು ಕಾರ್ಯಕ್ರಮ ನಡೆಸಲು ಯಾವುದೇ ಅಡ್ಡಿ ಇಲ್ಲ ಎಂದೂ ಕೋರ್ಟ್ ಹೇಳಿದೆ.
ಕೋವಿಡ್–19 ನಿಯಂತ್ರಣಾ ನಿಯಮಾವಳಿಗಳನ್ನು ಉಲ್ಲಂಘಿಸಿ ನಡೆಯುವ ಪ್ರತಿಭಟನೆ ಮತ್ತು ಬೃಹತ್ ಸಭೆಗಳನ್ನು ರಾಜ್ಯದಾದ್ಯಂತ ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಕೇರಳ ಹೈಕೋರ್ಟ್ ಪುರಸ್ಕರಿಸಿದೆ.
ಜೂನ್ 29ರಂದು ಎನ್ಡಿಎಂಎ ಹೊರಡಿಸಿದ್ದ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಯಾವುದೇ ಹೋರಾಟ, ಮೆರವಣಿಗೆ, ಆಂದೋಲಗಳನ್ನು ತಡೆಯುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ನ ವಿಭಾಗೀಯ ಪೀಠವು ಗುರುವಾರ ಸರ್ಕಾರಕ್ಕೆ ನಿರ್ದೇಶನ ನೀಡಿತು.
ಯಾವುದೇ ರಾಜಕೀಯ ಪಕ್ಷವು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿಯನ್ನು ಒಳಗೊಂಡ ವಿಭಾಗೀಯ ಪೀಠ ಕೇರಳದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಪೊಲೀಸ್ ವರಿಷ್ಠರಿಗೆ ಸೂಚನೆ ನೀಡಿತು.