ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ.
ತೇಜಸ್ವಿ ಯಾದವ್ ಅವರಿಗೆ ದೆಹಲಿಯಲ್ಲಿರುವ ಇ.ಡಿ ಕಚೇರಿಯಲ್ಲಿ ಡಿ.22ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಲಾಲೂ ಅವರಿಗೆ ಡಿ. 27ರಂದು ಕಚೇರಿಗೆ ಹಾಜರಾಗಿ ಹೇಳಿಕೆ ದಾಖಲಿಸುವಂತೆ ಸೂಚಿಸಲಾಗಿದೆ.
ಇದಕ್ಕೂ ಮೊದಲು ಕಳೆದ ಏಪ್ರಿಲ್ 11ರಂದು ತೇಜಸ್ವಿ ಯಾದವ್ ಅವರ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿದ್ದರು. ಆಗ ಸುಮಾರು 8 ಗಂಟೆಗಳ ಸುದೀರ್ಘ ವಿಚಾರಣೆ ನಡೆದಿತ್ತು.
ಆದರೆ ಇದೇ ಮೊದಲ ಬಾರಿಗೆ ಲಾಲೂ ಪ್ರಸಾದ್ ಅವರನ್ನೂ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.