ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯದ 24 ಉತ್ತರ ಪರಗಣ ಜಿಲ್ಲೆಯ ಸಂದೇಶಖಾಲಿಯಲ್ಲಿ ನಾಳೆ (ಗುರುವಾರ) ಪ್ರತಿಭಟನೆ ನಡೆಸಲಾಗುವುದು ಎಂದು ಸಿಪಿಐ(ಎಂ) ಪಕ್ಷ ಬುಧವಾರ ತಿಳಿಸಿದೆ.
ಪಶ್ಚಿಮ ಬಂಗಾಳ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು. ನಾಳೆ ಸಂದೇಶಖಾಲಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಅಲ್ಲಿ ಸ್ಥಳೀಯ ಟಿಎಂಸಿ ನಾಯಕರು ಭೂಮಿ ಕಬಳಿಕೆ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನು ವಿರೋಧಿಸಿ ಗುರುವಾರ ಪ್ರತಿಭಟನೆ ನಡೆಸಲಾಗುವುದು ಎಂದರು.
ಸಂದೇಶಖಾಲಿಯ ಮಾಜಿ ಶಾಸಕ ಸರ್ಧಾರ್ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕಲ್ಕತ್ತ ಹೈಕೋರ್ಟ್ ಅವರ ಬಿಡುಗಡೆಗೆ ಆದೇಶ ಮಾಡಿದೆ. ಈ ಅಕ್ರಮದಲ್ಲಿ ಅವರ ಪಾತ್ರ ಇಲ್ಲ ಎಂದು ಸಲೀಂ ಸ್ಪಷ್ಟಪಡಿಸಿದರು.
ಮುಂದಿನ ಹತ್ತು ದಿನಗಳಲ್ಲಿ ನಿರುದ್ಯೋಗ, ಭ್ರಷ್ಟಾಚಾರ, ಭೂ ಕಬಳಿಕೆ, ಬಡತನ, ಆರೋಗ್ಯ, ಶಿಕ್ಷಣ ಸೇರಿದಂತೆ ಮುಂತಾದ ವಿಷಯಗಳ ಬಗ್ಗೆ ಹತ್ತಕ್ಕೂ ಹೆಚ್ಚು ಸಭೆಗಳನ್ನು ನಡೆಸಿ ಚರ್ಚೆ ಮಾಡಲಾಗುವುದು ಎಂದು ಅವರು ಹೇಳಿದರು.