ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೆಹಲಿಯಲ್ಲಿ ರ್ಯಾಲಿ, ರೋಡ್ ಶೋ ನಡೆಸಿದರೂ, ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಯನ್ನು ಸೋಲಿಸಲು ವಿಫಲರಾಗಿದ್ದಾರೆ.
ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದ ಬಳಿಕ, ಮೇ 10ರಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದ ಅವರು, ಚುನಾವಣೆ ಮುಗಿದ ನಂತರ ಜೂನ್ 2ರಂದು ಮತ್ತೆ ಜೈಲು ಸೇರಿದ್ದಾರೆ.
ದೆಹಲಿಯಲ್ಲಿ ಮಾತ್ರವಲ್ಲದೇ, ಮಹಾರಾಷ್ಟ್ರ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಪ್ರಚಾರ ನಡೆಸಿದ್ದ ಕೇಜ್ರಿವಾಲ್, ತಮ್ಮ ಆಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ‘ಇಂಡಿಯಾ’ ಒಕ್ಕೂಟದ ಅಭ್ಯರ್ಥಿಗಳ ಪರವಾಗಿಯೂ ಮತಯಾಚನೆ ಮಾಡಿದ್ದರು.
ಅವರ ರ್ಯಾಲಿಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರೂ, ಅವು ಮತಗಳಾಗಿ ಪರಿವರ್ತನೆಯಾಗಲಿಲ್ಲ. ಹೀಗಾಗಿ, ದೆಹಲಿಯ ಎಲ್ಲ ಏಳು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ.
ನೆರೆಯ ಪಂಜಾಬ್ನ 13 ಲೋಕಸಭಾ ಕ್ಷೇತ್ರಗಳ ಪೈಕಿ, ಎಎಪಿ ಮೂರರಲ್ಲಿ ಗೆದ್ದಿದೆ. ಇಲ್ಲಿ ಮಿತ್ರಪಕ್ಷವಾದ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿತ್ತು. ಕಾಂಗ್ರೆಸ್ ಪಕ್ಷವೇ ಎಎಪಿ ಅಭ್ಯರ್ಥಿ ಗೆಲುವು ಅಡ್ಡಿಯಾಗಿದ್ದು ಗಮನಾರ್ಹ.
ದೆಹಲಿ ಸೇರಿದಂತೆ, ಎಎಪಿ ಒಟ್ಟು 22 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು.