ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಂತ್ಯಸಂಸ್ಕಾರ ನಡೆದ ಸ್ಥಳವಾದ ದಾದರ್ನ ಚೈತ್ಯಭೂಮಿಯಲ್ಲಿ ಸಮಾಪ್ತಿಯಾಗಲಿದೆ.
ಸೋಮವಾರದಿಂದ ಮುಂದಿನ ಭಾನುವಾರದವರೆಗೆ (ಮಾ. 17) ಯಾತ್ರೆಯ ಕೊನೆಯ ಹಂತ ನಡೆಯಲಿದ್ದು, ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ರಾಹುಲ್ ಗಾಂಧಿ ಅವರು ಸಂಚರಿಸಲಿದ್ದಾರೆ.
ಚೈತ್ಯಭೂಮಿಯಲ್ಲಿ ಸಮಾಪ್ತಿಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾತ್ರೆ ಮಹತ್ವದ್ದಾಗಿ ಪರಿಣಮಿಸಿದೆ. ಬಳಿಕ ಛತ್ರಪತಿ ಶಿವಾಜಿ ಮಹಾರಾಜ ಮೈದಾನದಲ್ಲಿ ರ್ಯಾಲಿ ನಡೆಯಲಿದೆ. ‘ಇಂಡಿಯಾ’ ಮೈತ್ರಿಕೂಟದ ನಾಯಕರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರ್ಯಾಲಿಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಂಬರಲಿರುವ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಕಾಂಗ್ರೆಸ್ ಮತ್ತು ‘ಇಂಡಿಯಾ’ ಮೈತ್ರಿಕೂಟವು ಈ ರ್ಯಾಲಿ ಮೂಲಕ ಚಾಲನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.