ನವದೆಹಲಿ: ಸಂಸತ್ತಿನಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಎದುರಾದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಈ ಸಂಬಂಧ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿರುವ ಕಾಂಗ್ರೆಸ್ ಸಂಸದ ಮಾಣಿಕ್ರಾಮ್ ಟಾಗೋರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬುಧವಾರ ಕಲಾಪ ನಡೆಯುತ್ತಿರುವಾಗಲೇ ಇಬ್ಬರು ಯುವಕರು ಸಂದರ್ಶಕರ ಗ್ಯಾಲರಿಯಿಂದ ಸದನದೊಳಗೆ ಜಿಗಿದು ಘೋಷಣೆಗಳನ್ನು ಕೂಗಿದ್ದರು. ಅಷ್ಟಲ್ಲದೆ, ‘ಸ್ಮೋಕ್ ಕ್ಯಾನ್’ (ಹಳದಿ ಬಣ್ಣದ ಹೊಗೆ ಉಗುಳುವ ಕ್ಯಾನ್) ಹಾರಿಸಿ ದಾಂದಲೆ ಎಬ್ಬಿಸಿದ್ದರು. ಇದರಿಂದಾಗಿ, ಸದನದಲ್ಲಿ ಆತಂಕ ಸೃಷ್ಟಿಯಾಗಿತ್ತು.
ಇದೇ ಸಮಯದಲ್ಲಿ ಸಂಸತ್ನ ಹೊರಗೂ ಇಬ್ಬರು ಪ್ರತಿಭಟನೆ ನಡೆಸಿದ್ದಾರೆ.
ಯುಎಪಿಎ ಅಡಿ ಪ್ರಕರಣ
ಈ ಕೃತ್ಯದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಮೈಸೂರು ನಿವಾಸಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ.
ಮೈಸೂರಿನ ವಿಜಯನಗರ ನಿವಾಸಿ ಮನೋರಂಜನ್ ಡಿ., ಉತ್ತರ ಪ್ರದೇಶದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್ನ ನೀಲಂ, ಮಹಾರಾಷ್ಟ್ರದ ಲಾತೂರ್ನ ಅಮೋಲ್ ಶಿಂದೆ ಹಾಗೂ ವಿಶಾಲ್ ಬಂಧಿತರು. ಇನ್ನೊಬ್ಬನಿಗಾಗಿ ಶೋಧ ಮುಂದುವರಿದಿದೆ.