ನವದೆಹಲಿ: ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಯ ಭಾಗವಾಗಿ ಗುರುವಾರ ವಿಚಾರಣೆಗೆ ಹಾಜರಾಗುವಂತೆ ವಕೀಲ ಜೈ ಅನಂತ್ ದೆಹಾದ್ರಾಯ್ ಅವರಿಗೆ ಸಿಬಿಐ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹದ್ರಾಯ್ ಅವರು ಮಹುವಾ ಅವರ ನಿಕಟವರ್ತಿಯಾಗಿದ್ದರು. ಬಳಿಕ ಅವರು ಮಹುವಾ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಹುವಾ ಅವರು ಸಂಸತ್ನಲ್ಲಿ ಪ್ರಶ್ನೆ ಕೇಳಲು ಹಣ ಹಾಗೂ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲದಲ್ಲಿ ದೂರು ದಾಖಲಿಸಿದ್ದರು. ಲೋಕಪಾಲರ ಶಿಫಾರಸಿನ ಅನ್ವಯ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನ ನೀತಿ ಸಮಿತಿಯ ವರದಿ ಆಧರಿಸಿ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲಾಗಿದೆ. ಇದನ್ನು ಪ್ರಶ್ನಿಸಿ ಮಹುವಾ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.