ನವದೆಹಲಿ:ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇಲ್ಲ. ಅವರು ಪಕ್ಷದ ಸಂಘಟನೆ ಹಾಗೂ ಪ್ರಚಾರ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಉತ್ತರ ಪ್ರದೇಶದ ಪೂರ್ವ ಭಾಗದ ಕಾರ್ಯಕರ್ತರ ಜೊತೆ ಸರಣಿ ಸಭೆಗಳಲ್ಲಿ ಪಾಲ್ಗೊಂಡಿರುವ ಅವರು ಈ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಫುಲ್ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಅವರ ಮೇಲೆ ಕಾರ್ಯಕರ್ತರು ಒತ್ತಡ ಹಾಕಿದರು. ಹಿಂದೆ ನೆಹರೂ ಅವರು ಈ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ಸೋನಿಯಾ ಅವರು ಪ್ರತಿನಿಧಿಸುತ್ತಿರುವ ರಾಯ್ಬರೇಲಿ ಅಥವಾ ಮೋದಿ ಪ್ರತಿನಿಧಿಸುತ್ತಿರುವ ವಾರಾಣಸಿಯಿಂದ ಅವರು ಕಣಕ್ಕಿಳಿಯುವ ಉಹಾಪೋಹಗಳು ಇವೆ. ಬುಧವಾರ ಪತ್ರಕರ್ತರ ಜೊತೆ ಅನೌಪಚಾರಿಕವಾಗಿ ಮಾತನಾಡಿದ ಪ್ರಿಯಾಂಕಾ, ಮೋದಿ ವಿರುದ್ಧ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದಾರೆ ಎಂದು ಹೇಳಿದರು.