ನವದೆಹಲಿ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆರು ರಾಜ್ಯಗಳಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿಗಳ ಬದಲಾವಣೆಗೆ ಚುನಾವಣಾ ಆಯೋಗವು ಆದೇಶಿಸಿದೆ. ಜೊತೆಗೆ ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಅವರನ್ನು ‘ಚುನಾವಣಾಯೇತರ’ ಕರ್ತವ್ಯಕ್ಕೆ ನಿಯೋಜಿಸಲೂ ನಿರ್ದೇಶಿಸಿದೆ.
ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಇಲಾಖೆಯ ಕಾರ್ಯದರ್ಶಿಗಳ ಬದಲಾವಣೆಗೆ ಆಯೋಗವು ಆದೇಶಿಸಲಾಗಿದೆ. ಚುನಾವಣೆಯಲ್ಲಿ ಹೋರಾಟಕ್ಕೆ ಸಮಾನ ಅವಕಾಶ ಇರಬೇಕು ಎಂದು ಆಯೋಗವು ಅಭಿಪ್ರಾಯಪಟ್ಟಿದೆ.
ಇದರ ಜೊತೆಗೆ ಮಿಜೋರಾಂ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿ ಅವರ ಬದಲಾವಣೆಗೂ ಆದೇಶಿಸಿದೆ.
ಪಶ್ಚಿಮ ಬಂಗಾಳದ ಡಿಜಿಪಿ ಅವರನ್ನು ಈ ಹಿಂದೆ 2016ರ ವಿಧಾನಸಭೆ ಚುನಾವಣೆ ಮತ್ತು 2019ರ ಲೋಕಸಭೆ ಚುನಾವಣೆ ವೇಳೆಯಲ್ಲಿಯೂ ಚುನಾವಣಾ ಕರ್ತವ್ಯದಿಂದ ಮುಕ್ತಿಗೊಳಿಸಲಾಗಿತ್ತು. ಅದೇ ಹಿನ್ನೆಲೆಯಲ್ಲಿ ಈಗಲೂ ಬದಲಾವಣೆಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
‘ಡಿಜಿಪಿ ರಾಜೀವ್ ಕುಮಾರ್ ಅವರನ್ನು ‘ಚುನಾವಣಾಯೇತರ’ ಕರ್ತವ್ಯಕ್ಕೆ ನಿಯೋಜಿಸಬೇಕು. ಮಧ್ಯಂತರ ವ್ಯವಸ್ಥೆಯಾಗಿ ಅವರಿಗಿಂತಲೂ ಕಿರಿಯರಾದ ಅಧಿಕಾರಿಯನ್ನು ಡಿಜಿಪಿ ಹುದ್ದೆಗೆ ನಿಯೋಜಿಸಬೇಕು’ ಎದು ಆಯೋಗವು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅವರಿಗೆ ಆದೇಶಿಸಿದೆ.
ಆರು ರಾಜ್ಯಗಳಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿಗಳು ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಸಚಿವಾಲಯವು ಒಳಗೊಂಡಂತೆ ಉಭಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ ಎಂಬ ಹಿನ್ನೆಲೆಯಲ್ಲಿ ಬದಲಾವಣೆಗೆ ಆಯೋಜಿಸಿದೆ. ಇದು, ಚುನಾವಣಾ ಕರ್ತವ್ಯ ಮುಖ್ಯವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳಲ್ಲಿ ಹೊಂದಾಣಿಕೆಗೆ ಅವಕಾಶ ಕಲ್ಪಿಸಬಹುದು ಎಂದು ಆಯೋಗ ಅಭಿಪ್ರಾಯಪಟ್ಟಿದೆ.
ಚುನಾವಣೆಯ ಸಂದರ್ಭದಲ್ಲಿ ಆಯೋಗವು ಇಂಥ ತೀರ್ಮಾನ ತೆಗೆದುಕೊಳ್ಳುವುದು ಸಹಜ. ಸಾಮಾನ್ಯವಾಗಿ ತವರು ಜಿಲ್ಲೆಗಳಲ್ಲಿ ಮೂರು ವರ್ಷಗಳಿಗಿಂತ ಹೆಚ್ಚಿನ ಅವಧಿಯಿಂದ ಬೀಡುಬಿಟ್ಟಿರುವ ಅಧಿಕಾರಿಗಳ ವರ್ಗಾವಣೆಗೆ ಆದೇಶಿಸುವುದು ಸಹಜವಾಗಿದೆ.
ಚುನಾವಣೆ ವೇಳಾಪಟ್ಟಿ ಘೋಷಣೆಯ ಬಳಿಕ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಬೃಹನ್ ಮುಂಬೈ ನಗರಪಾಲಿಕೆ ಆಯುಕ್ತ ಇಕ್ಬಾಲ್ ಸಿಂಗ್ ಚಾಹಲ್ ಮತ್ತು ಹೆಚ್ಚುವರಿ ಆಯುಕ್ತರು, ಉಪ ಆಯುಕ್ತರ ವರ್ಗಾವಣೆಗೆ ಆದೇಶಿಸಿತ್ತು. ಮಹಾರಾಷ್ಟ್ರ ಸರ್ಕಾರ ಇದಕ್ಕೆ ಸ್ಪಂದಿಸಿರಲಿಲ್ಲ. ಈ ನಡೆಗೆ ಆಯೋಗ ಅಸಮಾಧಾನ ವ್ಯಕ್ತಪಡಿಸಿದ ಹಿಂದೆಯೇ, ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಅವರು, ಅಧಿಕಾರಿಗಳ ವರ್ಗಾವಣೆಗೆ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.