ಭೋಪಾಲ್: ಅಕ್ರಮ ಗಣಿಗಾರಿಕೆ ವಿರುದ್ಧ ದನಿಯೆತ್ತಿದ್ದಕ್ಕೆ ‘ಸ್ಥಳೀಯ ಸಚಿವ’ರೊಬ್ಬರು ಪೊಲೀಸರನ್ನು ಬಳಸಿಕೊಂಡು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಧ್ಯ ಪ್ರದೇಶದ ಬಿಜೆಪಿ ಶಾಸಕಿ ನೀಲಮ್ ಮಿಶ್ರಾ ಆರೋಪಿಸಿದ್ದಾರೆ. ಮಧ್ಯ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ.
ಈ ಕುರಿತು ವಿಧಾನಸಭೆಯಲ್ಲೇ ಆರೋಪ ಮಾಡಿರುವ ನೀಲಮ್, ತಮಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ನಂತರ ವಿಧಾನಸಭೆಯ ಹೊರಗಡೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಗಣಿಗಾರಿಕೆ ಮತ್ತು ಕೈಗಾರಿಕಾ ಸಚಿವ ರಾಜೇಂದ್ರ ಶುಕ್ಲಾ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂಬುದಾಗಿ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
‘ಸಚಿವರ ಪ್ರಭಾವದಿಂದಾಗಿ ಪೊಲೀಸರು ತಮ್ಮ ಪತಿ ಮತ್ತು ಕುಟುಂಬದ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಆದರೆ, ತಮ್ಮ ವಿರುದ್ಧದ ಆರೋಪವನ್ನು ಶುಕ್ಲಾ ನಿರಾಕರಿಸಿದ್ದಾರೆ. ಶಾಸಕಿ ಕಾಂಗ್ರೆಸ್ ಒಲವು ಗಳಿಸಿಕೊಳ್ಳುವ ಯತ್ನ ಮಾಡುತ್ತಿದ್ದಾರೆ. ಪ್ರಚಾರ ಪಡೆಯುವುದಕ್ಕೋಸ್ಕರ ಈ ರೀತಿ ಆರೋಪ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.