ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಡಕಟ್ಟು ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಿಡುಗಡೆಗೆ ಸಂತ್ರಸ್ತ ಮನವಿ

Published 8 ಜುಲೈ 2023, 6:09 IST
Last Updated 8 ಜುಲೈ 2023, 6:09 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ಸೀದೀ ಜಿಲ್ಲೆಯಲ್ಲಿ ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಘಟನೆಗೆ ದೇಶದೆಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈಗ ಈ ಕುರಿತು ಹೇಳಿಕೆ ನೀಡಿರುವ ಸಂತ್ರಸ್ತ ದಶಮತ್‌ ರಾವತ್‌, ಆರೋಪಿಯಿಂದ ತಪ್ಪಾಗಿದೆ. ಅವರಿಗೆ ತಪ್ಪಿನ ಅರಿವಾಗಿದೆ. ಅವರನ್ನು ಬಿಡುಗಡೆಗೊಳಿಸಿ ಎಂದು ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹೇಯಕೃತ್ಯ ಎಸಗಿದ್ದ ಆರೋಪಿ ಪ್ರವೇಶ್‌ ಶುಕ್ಲಾನನ್ನು ಬುಧವಾರ ಬಂಧಿಸಲಾಗಿತ್ತು. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್‌ 294 (ಅಸಭ್ಯ ವರ್ತನೆ), 504 (ಉದ್ದೇಶ ಪೂರ್ವಕ ಅವಹೇಳನ), ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿಯೂ (ಎನ್‌ಎಸ್‌ಎ) ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಆರೋಪಿಯ ಅಕ್ರಮ ಸ್ವತ್ತುಗಳನ್ನು ನೆಲಸಮಗೊಳಿಸಲಾಗಿದೆ.

ಈ ಹೇಯಕೃತ್ಯ ಮಧ್ಯಪ್ರದೇಶದಲ್ಲಿ ರಾಜಕೀಯ ವಿವಾದಕ್ಕೂ ಕಾರಣವಾಗಿತ್ತು. ಆರೋಪಿಯು ಸ್ಥಳೀಯ ಬಿಜೆಪಿ ನಾಯಕ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ವ್ಯಾಪಕ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರು ಸಂತ್ರಸ್ತ ದಶಮತ್‌ ರಾವತ್‌ ಅವರ ಪಾದಗಳನ್ನು ತೊಳೆದು ಕೃತ್ಯದ ಬಗ್ಗೆ ಕ್ಷಮೆಯಾಚಿಸಿದ್ದರು.

ಸಂತ್ರಸ್ತನಿಗೆ ರಾಜ್ಯ ಸರ್ಕಾರ ₹5 ಲಕ್ಷ ಸಹಾಯಧನ ಮತ್ತು ಮನೆ ಕಟ್ಟಲು ಹೆಚ್ಚುವರಿಯಾಗಿ ₹1.5 ಲಕ್ಷ ಘೋಷಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT