ಮಂಡಲ್( ಮಧ್ಯಪ್ರದೇಶ): ರಾಜ್ಯ ಸರ್ಕಾರ ಜನರಿಗೆ ಉದ್ಯೋಗ ಅವಕಾಶ ಸೃಷ್ಟಿಸದೇ ಕೇವಲ ಲೂಟಿ ಹಾಗೂ ಹಗರಣಗಳಲ್ಲಿ ಮುಳುಗಿದೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಇಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಧ್ಯಪ್ರದೇಶದಲ್ಲಿ ಕಳೆದ 18 ವರ್ಷಗಳಿಂದ ಬಿಜೆಪಿ ಆಡಳಿತವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡದೆ ರಾಜ್ಯವನ್ನು ಲೂಟಿ ಮಾಡುವ ಕಾರ್ಯದಲ್ಲಿ ತೊಡಗಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಕೇವಲ ಹಗರಣಗಳನ್ನು ನಡೆಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ರಾಜ್ಯದ ಯುವಜನತೆಗೆ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ವಿಫಲವಾಗಿರುವ ಬಿಜೆಪಿಯವರು, ಚುನಾವಣೆಯ ಸಂದರ್ಭಗಳಲ್ಲಿ ಮಾತ್ರ ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಾರೆಂದು ಹೇಳಿದ್ದಾರೆ.
ಮಧ್ಯಪ್ರದೇಶದ 230 ಸ್ಥಾನಗಳಿಗಾಗಿ ನ. 17 ರಂದು ಚುನಾವಣೆ ನಡೆಯಲಿದೆ. ಬಿಜೆಪಿಯು ಈಗಾಗಲೇ 136 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.