ಮುಂಬೈ:ಭಾರಿ ಕುತೂಹಲಕ್ಕೆ ಕಾರಣವಾಗಿರುವ ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆಯು ಡಿ. 30ರ ಸೋಮವಾರಕ್ಕೆ ಮುಂದೂಡಿಕೆಯಾಗುವ ಸಾಧ್ಯತೆಗಳಿವೆ. ಅಲ್ಲದೆ, ಬಿಜೆಪಿ–ಎನ್ಸಿಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅಜಿತ್ ಪವಾರ್ ಅವರೇ ಈ ಸರ್ಕಾರದಲ್ಲೂ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗಿದೆ.
ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಎನ್ಸಿಪಿ ವರಿಷ್ಠ ಶರದ್ ಪವಾರ್ ಅವರು ಮುಂಬೈನ ಸಹ್ಯಾದ್ರಿ ಗೆಸ್ಟ್ ಹೌಸ್ನಲ್ಲಿ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಆದರೆ, ಸರ್ಕಾರದ ಅಂಗ ಪಕ್ಷವಾಗಿರುವ ಕಾಂಗ್ರೆಸ್ನ ಯಾವೊಬ್ಬ ನಾಯಕರೂ ಈ ಸಭೆಗೆ ಹಾಜರಾಗಿರಲಿಲ್ಲ.
ಸಂಪುಟ ವಿಸ್ತರಣೆ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಎನ್ಸಿಪಿ ನಾಯಕರೊಬ್ಬರು,‘ಬಹುಶಃ ಡಿ. 30ರಂದು ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ. ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ,’ ಎಂದು ಹೇಳಿದರು.
ಕಾಂಗ್ರೆಸ್ ಜೊತೆಗಿನ ಅಂತಿಮ ಚರ್ಚೆಯ ನಂತರ ಸಂಪುಟ ವಿಸ್ತರಣೆಯ ಕಸರತ್ತು ನಡೆಯಲಿದೆ ಎಂದು ಅವರು ಹೇಳಿದರು ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.