ಮುಂಬೈ: ಜನರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದರೆ, ಲಾಕ್ಡೌನ್ ಮಾಡುವ ಆಯ್ಕೆಯೊಂದೇ ರಾಜ್ಯ ಸರ್ಕಾರದ ಮುಂದಿರಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆ ಉಲ್ಬಣಗೊಳ್ಳುತ್ತಿರುವ ಕಾರಣ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಮಾತನಾಡಿರುವ ಉದ್ದವ್ ಠಾಕ್ರೆ, 'ಜನರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದರೆ, ಲಾಕ್ಡೌನ್ ಮಾಡುವ ಆಯ್ಕೆಯೊಂದೇ ರಾಜ್ಯ ಸರ್ಕಾರದ ಮುಂದಿರಲಿದೆ' ಎಂದು ಸ್ಪಷ್ಟಪಡಿಸಿದ್ದಾರೆ.
'ನಮ್ಮ ಮುಂದೆ ಲಾಕ್ಡೌನ್ ಮಾಡುವ ಆಯ್ಕೆ ಇದೆ. ಆದರೆ, ಕಳೆದ ಸಾರಿಯಂತೆ ಈ ಸಾರಿಯೂ ರಾಜ್ಯದ ಜನರು ಸರ್ಕಾರಕ್ಕೆ ಸಹಕಾರ ನೀಡುತ್ತಾರೆ ಎಂಬುದಾಗಿ ನಾನು ನಂಬಿದ್ದೇನೆ. ಎಲ್ಲರೂ ಸ್ವಯಂಪ್ರೇರಣೆಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಬೇಕಿದೆ' ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಒಟ್ಟಾರೆ 23,96,340 ಜನರಿಗೆ ಸೋಂಕು ತಗುಲಿದ್ದು, 1,67,637 ಸಕ್ರಿಯ ಪ್ರಕರಣಗಳಿವೆ. ಈವರೆಗೆ 21,75,565 ಜನರು ಸೋಂಕಿನಿಂದ ಗುಣಮುಖರಾಗಿದ್ದು, 53,138 ಜನರು ಸಾವಿಗೀಡಾಗಿದ್ದಾರೆ.
ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಎಲ್ಲಾ ಖಾಸಗಿ ಕಂಪನಿಗಳು ಶೇಕಡಾ 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.