ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾ ರಾಜಕೀಯ| ನಾಳೆ ಸಂಜೆ 5ರ ಒಳಗೆ ಬಹುಮತ ಸಾಬೀತು ಮಾಡಬೇಕು ಫಡಣವೀಸ್‌

Last Updated 26 ನವೆಂಬರ್ 2019, 5:47 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರು ಬುಧವಾರ (ನ. 27) ಸಂಜೆ 5ರ ಒಳಗೆ ಬಹುಮತ ಸಾಬೀತು ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಮಂಗಳವಾರ ಮಹತ್ವದ ಆದೇಶ ನೀಡಿದೆ.

ಹಂಗಾಮಿ ಹಂಗಾಮಿ ಸ್ಪೀಕರ್‌ ಆಯ್ಕೆ, ಪ್ರತಿಜ್ಞಾ ವಿಧಿ ಬೋಧನೆ ಮತ್ತು ವಿಶ್ವಾಸ ಮತ ಸಾಬೀತು ಪ್ರಕ್ರಿಯೆಯನ್ನು ಬುಧವಾರಸಂಜೆ 5ರ ಒಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ವಿಶ್ವಾಸ ಮತ ಯಾಚನೆ ವೇಳೆ ಗುಪ್ತಮತದಾನಕ್ಕೆ ಅವಕಾಶವಿಲ್ಲ. ಮತ್ತು ಸಂಪೂರ್ಣ ಪ್ರಕ್ರಿಯೆಯ ವಿಡಿಯೊ ಚಿತ್ರೀಕರಣ ನಡೆಯಬೇಕುಎಂದು ಸುಪ್ರೀಂ ಕೋರ್ಟ್‌ನ ಪೀಠ ತಿಳಿಸಿದೆ.

ಪ್ರಜಾಪ್ರಭುತ್ವದಮೌಲ್ಯಗಳನ್ನು ನಾವು ಕಾಪಾಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ಇದೇ ವೇಳೆ ಹೇಳಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎನ್‌.ವಿ ರಮಣ, ಅಶೋಕ್‌ ಭೂಷಣ್‌ ಮತ್ತು ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತ್ತು.

ಹಿರಿಯ ವಕೀಲ ಕಪಿಲ್‌ ಸಿಬಲ್‌ ಕಾಂಗ್ರೆಸ್‌ ಪರವಾಗಿ, ಮಾಜಿ ಅಟಾರ್ನಿ ಜನರಲ್‌ ಮುಕುಲ್‌ ರೋಹಟಗಿ ಅವರು ಫಡಣವೀಸ್‌ಪರ ವಾದಿಸಿದರು.ಅಜಿತ್ ಪವಾರ್ ಪರವಾಗಿ ವಕೀಲ ಮಣಿಂದರ್ ಸಿಂಗ್ ವಾದ ಮಂಡನೆ ಮಾಡಿದರು. ಮಹಾರಾಷ್ಟ್ರ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ತುಷಾರ್ ಮೆಹ್ತಾ ವಾದಿಸಿದರು.

ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿಯು ಶಿವಸೇನೆ ಮೈತ್ರಿಯೊಂದಿಗೆ ಏಕೈಕ ದೊಡ್ಡಪಕ್ಷವಾಗಿ ಹೊರಹೊಮ್ಮಿತ್ತಾದರೂ, ಸೇನಾದ ಅನಿರೀಕ್ಷಿತ ನಡೆಯಿಂದಾಗಿ ಸರ್ಕಾರ ರಚನೆ ಮಾಡಲು ವಿಫಲವಾಗಿತ್ತು. ನಂತರ, ಮೂರೂ ಪಕ್ಷಗಳು (ಬಿಜೆಪಿ, ಶಿವಸೇನೆ, ಎನ್‌ಸಿಪಿ) ಸರ್ಕಾರ ರಚನೆ ಮಾಡದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಲಾಗಿತ್ತು.

ಹೀಗಾಗಿ, ಸರ್ಕಾರ ರಚನೆ ಮಾಡಲು ನಮಗೆ ಸೂಕ್ತ ಕಾಲವಕಾಶ ನೀಡಿಲ್ಲ ಎಂದು ಆರೋಪಿಸಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಈಗಾಗಲೇ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದವು.

ಈ ನಡುವೆಯೇ ಶನಿವಾರ (ನ.23) ಬಿಜೆಪಿಯ ದೇವೇಂದ್ರ ಫಡಣವೀಸ್‌ ಅವರು ಎನ್‌ಸಿಪಿಯ ಒಂದು ಬಣದ ಶಾಸಕರೊಂದಿಗೆ ಸರ್ಕಾರ ರಚನೆ ಮಾಡಿ ತಾವು ಮುಖ್ಯಮಂತ್ರಿಯಾಗಿದ್ದಾರೆ. ಎನ್‌ಸಿಪಿಯ ಅಜಿತ್‌ ಪವಾರ್‌ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ರಾಜ್ಯದಲ್ಲಿ ಹೇರಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ದೀಢರ್‌ ಅಂತ್ಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಆತುರಾತುರವಾಗಿ ದೇವೇಂದ್ರ ಫಡಣವೀಸ್‌ ಅವರಿಗೆ ಸರ್ಕಾರ ರಚನೆ ಮಾಡಲು ಅವಕಾಶ ನೀಡಿದ ರಾಜ್ಯಪಾಲರ ನಡೆಯನ್ನು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು.

ಇಂದಿನ ತೀರ್ಪು ಮಹಾರಾಷ್ಟ್ರ ರಾಜಕೀಯವನ್ನು ಮತ್ತಷ್ಟೂ ಕೌತುಕಭರಿತವಾಗಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT