ನವದೆಹಲಿ: ಎಎಪಿ ರಾಜ್ಯಸಭೆ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಶುಕ್ರವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು.
ಮಹಿಳಾ ಮೋರ್ಚಾದ ಅಧ್ಯಕ್ಷೆ ರಿಚಾ ಪಾಂಡೆ ಮಿಶ್ರಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಳೆಗಳನ್ನು ಹಿಡಿದಿದ್ದ ಪ್ರತಿಭಟನಾಕಾರರು ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿದರು.
ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಘಟನೆಯ ಬಗ್ಗೆ ಕೇಜ್ರಿವಾಲ್ ಮೌನವಾಗಿರುವುದಕ್ಕೆ ಬಿಜೆಪಿ ಮಹಿಳಾ ಅವರಿಗೆ ಬಳೆಗಳನ್ನು ಹಸ್ತಾಂತರಿಸಲು ಬಯಸಿದೆ ಎಂದು ಮಿಶ್ರಾ ಹೇಳಿದರು.
STORY | Maliwal 'assault': BJP Mahila Morcha protests near Kejriwal's residence
— Press Trust of India (@PTI_News) May 17, 2024
READ: https://t.co/XJkUyvOO1o pic.twitter.com/8UdsIKpBgL
ಮಾಲಿವಾಲ್ ಅವರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಫ್ಐಆರ್ ದಾಖಲಿಸಿದ್ದಾರೆ. ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.
ಮಾಹಿತಿ ಸಂಗ್ರಹ:
ಇದಕ್ಕೂ ಮುನ್ನ, ಹೆಚ್ಚುವರಿ ಪೊಲೀಸ್ ಆಯುಕ್ತ ಪಿ.ಎಸ್.ಕುಶ್ವಾಹಾ ನೇತೃತ್ವದ ದೆಹಲಿ ಪೊಲೀಸರ ತಂಡವು ಗುರುವಾರ ಮಾಲಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ, ಅವರಿಂದ ನಾಲ್ಕು ತಾಸು ಮಾಹಿತಿ ಕಲೆಹಾಕಿತು. ಮಾಲಿವಾಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ಬಳಿಕ ಎಫ್ಐಆರ್ ದಾಖಲಿಸಿದೆ.
ಅಲ್ಲದೇ ಪ್ರಕರಣದ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಬಿಭವ್ ಕುಮಾರ್ಗೆ ಶುಕ್ರವಾರ ಸಮನ್ಸ್ ನೀಡಿದೆ.
‘ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿ ಯಾಗಿರುವ ಬಿಭವ್ ಕುಮಾರ್ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು’ ಎಂದು ಸಂಸದೆ ಸ್ವಾತಿ ಮಾಲಿವಾಲ್ ಅವರು ಆರೋಪಿಸಿದ್ದರು.
ಸಿ.ಎಂ ಕಚೇರಿಯಲ್ಲಿ ಪ್ರಮುಖ ಸ್ಥಾನದಲ್ಲಿರುವ ಬಿಭವ್ ಕುಮಾರ್ ವಿರುದ್ಧ ಕೇಳಿಬಂದ ಆರೋಪವು ಈಗ ವಿವಾದಕ್ಕೆ ತಿರುಗಿದ್ದು, ಪ್ರತಿಪಕ್ಷ ಗಳ ತೀವ್ರ ಟೀಕೆಗೂ ಗುರಿಯಾಗಿದೆ. ಎಎಪಿಯ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರು ಕೂಡ ಹಲ್ಲೆ ಕೃತ್ಯವನ್ನು ಖಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.