ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೂಚಿಸಿದ್ದಾರೆ ಎಂದು ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ (ಆರ್ಎಸ್ಪಿ) ಮುಖಂಡ ಎನ್.ಕೆ.ಪ್ರೇಮಚಂದ್ರನ್ ‘ಪಿಟಿಐ’ಗೆ ತಿಳಿಸಿದ್ದಾರೆ.
ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹಾಗೂ ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಸೂಚಿಸಿದ್ದಾರೆ ಎಂದು ಪ್ರೇಮಚಂದ್ರನ್ ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ಮಮತಾ ಬ್ಯಾನರ್ಜಿ ಇಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದಿದ್ದರು. ಸಭೆಯ ಬಳಿಕ ಮಾತನಾಡಿರುವ ಅವರು, ‘ರಾಷ್ಟ್ರಪತಿ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಘೋಷಿಸಲು ನಿರ್ಧರಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್, ಶಿವಸೇನಾ, ಎನ್ಸಿಪಿ, ಆರ್ಜೆಡಿ, ಎಸ್ಪಿ, ಜೆಡಿಎಸ್, ಸಿಪಿಐ, ಆರ್ಎಸ್ಪಿ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿಎಸ್, ಡಿಎಂಕೆ, ಆರ್ಎಲ್ಡಿ ಹಾಗೂ ಜೆಎಮ್ಎಮ್ ಸೇರಿದಂತೆ 17 ಪಕ್ಷಗಳು ಈ ಸಭೆಯಲ್ಲಿ ಭಾಗವಹಿಸಿವೆ.