ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಫೆಬ್ರುವರಿ 21ರಂದು ಪಂಜಾಬ್ಗೆ ಭೇಟಿ ನೀಡಲಿದ್ದು, ಅಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅವರು ಅಲ್ಲಿಯ ಸ್ವರ್ಣಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಕೂಡ ಹೇಳಲಾಗಿದೆ.
ಮಮತಾ ಅವರು ಎಎಪಿಯ ಉನ್ನತ ನಾಯಕರಿಬ್ಬರನ್ನು ಭೇಟಿ ಆಗುತ್ತಿರುವುದು ಮುಂಬರಲಿರುವ ಲೋಕಸಭೆ ಚುನಾವಣೆ ಮತ್ತು ವಿರೋಧಪಕ್ಷಗಳ ಒಕ್ಕೂಟ ರಚನೆ ದೃಷ್ಟಿಯಿಂದ ಮಹತ್ವ ಪಡೆದಿದೆ.
ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವೇಳೆಯೇ ಮಮತಾ ಅವರು ಪಂಜಾಬ್ಗೆ ಆಗಮಿಸುತ್ತಿದ್ದಾರೆ. ಈಗಾಗಲೇ ಅವರು ಪ್ರತಿಭಟನನಿರತ ರೈತರಿಗೆ ಬೆಂಬಲ ನೀಡಿದ್ದಾರೆ ಮತ್ತು ಅವರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿದ್ದಾರೆ.