ನವದೆಹಲಿ: ದೇಶದಾದ್ಯಂತ ರಾಸಾಯನಿಕ ಮಿಶ್ರಣ ಮಾಡಿ ಬೆಲ್ಲ ತಯಾರಿಸುವ ಘಟಕಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮಂಡ್ಯದ ಪಕ್ಷೇತರ ಸದಸ್ಯೆ ಸುಮಲತಾ ಅಂಬರೀಷ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಲೋಕಸಭೆಯ ಶೂನ್ಯವೇಳೆಯಲ್ಲಿ ಶುಕ್ರವಾರ ಈ ವಿಷಯ ಪ್ರಸ್ತಾಪಿಸಿದ ಅವರು, ಬೆಲ್ಲದ ಬಣ್ಣವನ್ನು ಬದಲಿಸುವ ನಿಟ್ಟಿನಲ್ಲಿ ರಾಸಾಯನಿಕ ಬಳಸುವುದರಿಂದ ಗ್ರಾಹಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಎಂದರು.
ಸಾವಯವ ಬೆಲ್ಲದ ಉತ್ಪಾದನೆಗೆ ಹೆಸರಾಗಿರುವ ಮಂಡ್ಯ ಜಿಲ್ಲೆಯಲ್ಲಿರುವ ಬೆಲ್ಲದ ಉದ್ಯಮದ ಉತ್ತೇಜನಕ್ಕೆ ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದರು.
ಮಂಡ್ಯ ಜಿಲ್ಲೆಯಲ್ಲಿ ಮೊದಲು 6,000ದಷ್ಟಿದ್ದ ಆಲೆಮನೆಗಳ ಸಂಖ್ಯೆ, ಆರ್ಥಿಕ ಸಹಾಯದ ಕೊರತೆಯಿಂದ ಈಗ 600ಕ್ಕೆ ಇಳಿದಿವೆ. ಕೇಂದ್ರ ಸರ್ಕಾರವು ಆತ್ಮನಿರ್ಭರ ಯೋಜನೆ ಅಡಿ ನೆರವು ನೀಡಬೇಕು ಎಂದು ಆಗ್ರಹಿಸಿದರು.