ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಮೇ 3ರಂದು. ಆದರೆ, ರಾಜ್ಯ ಸರ್ಕಾರವು ಅರಣ್ಯ ಪ್ರದೇಶಗಳಿಂದ ಜನರನ್ನು ಒಕ್ಕಲೆಬ್ಬಿಸಲು ಪ್ರಯತ್ನ ನಡೆಸಿದ್ದ ಹಿನ್ನೆಲೆಯಲ್ಲಿ ಚುರಾಚಾಂದ್ಪುರ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳಲ್ಲಿ ಫೆಬ್ರುವರಿಯಿಂದಲೇ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿತ್ತು. ರಾಜ್ಯದ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಬಹುತೇಕ ವರ್ಷಪೂರ್ತಿ ನಡೆದ ಸಂಘರ್ಷದಲ್ಲಿ ಸುಮಾರು 200 ಜನರು ಮೃತಪಟ್ಟು, 60,000 ಜನರು ನಿರಾಶ್ರಿತರಾಗಿದ್ದಾರೆ.