ನವದೆಹಲಿ: ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರದ ಕಾಯ್ದೆಯನ್ನು ಎತ್ತಿಹಿಡಿದ ಬಾಂಬೆ ಹೈಕೋರ್ಟ್ ತೀರ್ಪಿಗೆ ತಡೆ ಕೊಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಲು ಒಪ್ಪಿಕೊಂಡಿದೆ.
2014ರಿಂದಲೇ ಅನ್ವಯ ಆಗುವಂತೆ ಕಾಯ್ದೆಯ ಅನುಷ್ಠಾನಕ್ಕೆ ಹೈಕೋರ್ಟ್ ಒಪ್ಪಿಗೆ ನೀಡಿತ್ತು. ಆದರೆ, ಪೂರ್ವಾನ್ವಯ ಆಗುವಂತೆ ಮೀಸಲಾತಿ ಜಾರಿ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಕಾಯ್ದೆ 2018ರ ಮೂಲಕ ಮರಾಠ ಸಮುದಾಯಕ್ಕೆ ಶೇ 16ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿತ್ತು. ಆದರೆ, ಮೀಸಲಾತಿ ಪ್ರಮಾಣವನ್ನು ಶಿಕ್ಷಣದಲ್ಲಿ ಶೇ 13 ಮತ್ತು ಉದ್ಯೋಗದಲ್ಲಿ ಶೇ 12ಕ್ಕೆ ಇಳಿಸಲು ಹೈಕೋರ್ಟ್ ಸೂಚಿಸಿತ್ತು.
ಮೀಸಲಾತಿಯ ಪ್ರಮಾಣವು ಶೇ 50ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಈ ಕಾಯ್ದೆಯ ಮೂಲಕ ಉಲ್ಲಂಘಿಸಲಾಗಿದೆ. ಅಷ್ಟೇ ಅಲ್ಲದೆ, ರಾಜಕೀಯ ಕಾರಣಕ್ಕಾಗಿ ಈ ಮೀಸಲಾತಿ ನೀಡಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.