ಮುಂಬೈ: ಹುಸಿ ಭರವಸೆಗಳ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.
ಕಾಂಗ್ರೆಸ್ನ ಮಹಾರಾಷ್ಟ್ರ ರಾಜ್ಯ ಘಟಕ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಖರ್ಗೆ ಅವರು, ‘ಮೋದಿ ಗ್ಯಾರಂಟಿಯ ಬಗ್ಗೆ ಮಾತನಾಡುವ ಪ್ರಧಾನಿಯವರು ಬಿಜೆಪಿ ಗ್ಯಾರಂಟಿಯ ಬಗ್ಗೆ ಮಾತನಾಡುವುದಿಲ್ಲ. ಅವರೊಬ್ಬ ಸ್ವಾರ್ಥಿ' ಎಂದು ಟೀಕಿಸಿದರು.
‘ಕಳೆದ 10 ವರ್ಷಗಳಲ್ಲಿ ಅವರ ಹುಸಿ ಭರವಸೆಗಳನ್ನು ಕೇಳಿದ್ದೇವೆ. ಅವರು ಕಪ್ಪುಹಣ ಹಿಂದೆ ತರುವ ಮತ್ತು ಪ್ರತಿಯೊಬ್ಬ ಭಾರತೀಯನ ಖಾತೆಗೆ ₹15 ಲಕ್ಷ ಜಮೆ ಮಾಡುವ ಭರವಸೆ ನೀಡಿದ್ದರು. ನಿಮ್ಮ ಖಾತೆಗೆ ಹಣ ಬಂದಿದೆಯೇ? ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಭರವಸೆ ನೀಡಿದ್ದರು. ಇದು ಈಡೇರಿದೆಯೇ? ಎಂದು ಪ್ರಶ್ನಿಸಿದರು.
‘ನಮ್ಮ ಹೋರಾಟ ದೊಡ್ಡ ಪ್ರಮಾಣದಲ್ಲಿದೆ. ನಾವೆಲ್ಲರೂ ಒಟ್ಟಾಗಿ ಬಿಜೆಪಿ, ಮೋದಿ ಮತ್ತು ಇ.ಡಿ, ಸಿ.ಬಿ.ಐ, ಐ.ಟಿ, ಸಿವಿಸಿ ಸಂಸ್ಥೆಗಳ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುವುದು ಬಹುದೊಡ್ಡ ಸವಾಲಾಗಿದೆ’ ಎಂದರು.