ನವದೆಹಲಿ: ಕಡಲ ಭದ್ರತೆ ಕುರಿತು ಸೋಮವಾರ ನಡೆಯಲಿರುವ ವಿಶ್ವಸಂಸ್ಥೆಯು ಭದ್ರತಾ ಮಂಡಳಿಯ ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಲಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳುತ್ತಿರುವ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿಯಾಗಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಮಂಡಳಿಯ ಸದಸ್ಯರು ಮತ್ತು ಹಲವು ರಾಷ್ಟ್ರಗಳ ನಾಯಕರು ಈ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಡಲ ಭದ್ರತೆ ಹೆಚ್ಚಿಸುವುದು ಹಾಗೂ ಅಂತರರಾಷ್ಟ್ರೀಯ ಸಹಕಾರ ಸೇರಿದಂತೆ ಅಪರಾಧಗಳನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಮುಖವಾಗಿ ಚರ್ಚೆ ನಡೆಯಲಿದೆ.
ಈಗಾಗಲೇ ವಿಶ್ವಸಂಸ್ಥೆ ಭದ್ರತಾ ಮಂಡಳಿ ಈ ವಿಷಯದ ಬಗ್ಗೆ ನಿರ್ಣಯಗಳನ್ನು ಕೈಗೊಂಡಿದೆ. ಆದರೆ, ಈ ವಿಷಯ ಒಂದೇ ರಾಷ್ಟ್ರಕ್ಕೆ ಸೀಮಿತವಾಗಿಲ್ಲ. ಹೀಗಾಗಿ, ಈ ಬಾರಿ ಸಮಗ್ರವಾಗಿ ಚರ್ಚಿಸಿ ಪರಿಹಾರ ರೂಪಿಸಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.