ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಕ್ಷಣ, ಆರೋಗ್ಯ, ಉದ್ಯೋಗಕ್ಕೆ ಆದ್ಯತೆ: ಪ್ರಮಾಣವಚನಕ್ಕೂ ಮುನ್ನ ಯಾದವ್ ಹೇಳಿಕೆ

Published 13 ಡಿಸೆಂಬರ್ 2023, 6:21 IST
Last Updated 13 ಡಿಸೆಂಬರ್ 2023, 6:21 IST
ಅಕ್ಷರ ಗಾತ್ರ

ಭೋಪಾಲ್‌: ಅಚ್ಚರಿಯ ಬೆಳವಣಿಗೆಯಲ್ಲಿ ಮಧ್ಯಪ್ರದೇಶ ಮುಖ್ಯಮಮತ್ರಿ ಸ್ಥಾನಕ್ಕೆ ಆಯ್ಕೆಯಾಗಿರುವ ಹಿಂದುಳಿದ ವರ್ಗಗಳ ನಾಯಕ ಮೋಹನ್‌ ಯಾದವ್‌ ಅವರು, 'ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ' ಎಂದು ಹೇಳಿದ್ದಾರೆ.

ಯಾದವ್‌ ಅವರು ಮುಖ್ಯಮಂತ್ರಿಯಾಗಿ ಮತ್ತು ರಾಜೇಂದ್ರ ಶುಕ್ಲಾ, ಜಗದೀಶ್‌ ದೇವ್ಡಾ ಅವರು ಉಪ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಭೋಪಾಲ್‌ನ ಲಾಲ್‌ ಪರೇಡ್‌ ಮೈದಾನದಲ್ಲಿ ಸಜ್ಜಾಗಿದೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಅವರು ಈ ವೇಳೆ ಉಪಸ್ಥಿತರಿರಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಪ್ರಖರ ಹಿಂದುತ್ವ ಪ್ರತಿಪಾದಕನಾಗಿರುವ ಯಾದವ್‌ ಅವರು ಇಂದು ಭೋಪಾಲ್‌ನಲ್ಲಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. 'ಜನ ಸಂಘ' ಸ್ಥಾಪಕರಲ್ಲಿ ಒಬ್ಬರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಹಾಗೂ ಬಿಜೆಪಿ ಸಂಸ್ಥಾಪಕ ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರಿಗೂ ನಮಿಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, 'ಉತ್ತಮ ಆಡಳಿತಕ್ಕೆ ಹೆಸರಾದ ರಾಜ ವಿಕ್ರಮಾದಿತ್ಯನ (ಉಜ್ಜೈನಿಗೆ) ಊರಿನವನಾಗಿದ್ದೇನೆ. ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ಮೋದಿ, ಅಮಿತ್‌ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರದ ವಿವಿಧ ಇಲಾಖೆಗಳ ಸಚಿವರು ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳನ್ನು ಮಧ್ಯಪ್ರದೇಶಕ್ಕೆ ಸ್ವಾಗತಿಸುತ್ತೇನೆ' ಎಂದಿದ್ದಾರೆ.

ಭಾರಿ ಬಹುಮತ
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ 163 ಸ್ಥಾನಗಳಲ್ಲಿ ಜಯ ಗಳಿಸಿರುವ ಬಿಜೆಪಿ, ಭಾರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡಿದೆ. ಕಾಂಗ್ರೆಸ್ 66 ಸ್ಥಾನಗಳಲ್ಲಿ ಗೆಲುವು ಸಾಧಿ‌ಸಿದೆ.

ಡಿಸೆಂಬರ್‌ 11ರಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯು, 58 ವರ್ಷದ ಯಾದವ್ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಿತು.

ಯಾದವ್‌ ಅವರು 2013ರಲ್ಲಿ ಮೊದಲ ಬಾರಿಗೆ ಉಜ್ಜೈನಿ ದಕ್ಷಿಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2018 ಮತ್ತು 2023ರಲ್ಲಿಯೂ ವಿಧಾನಸಭೆ ಪ್ರವೇಶಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT