ರಾಂಚಿ: ಭೂ ಹಗರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಕುರಿತು ವಿಚಾರಣೆಗೆ ಹಾಜರಾಗುವ ಸಮಯ ತಿಳಿಸುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ನೋಟಿಸ್ ಹಾಗೂ ಸಮನ್ಸ್ ನೀಡಿದೆ.
ವಿಚಾರಣೆಗೆ ಹಾಜರಾಗುವ ದಿನಾಂಕ, ಸಮಯ ಹಾಗೂ ಸ್ಥಳದ ಕುರಿತು ತನಿಖಾಧಿಕಾರಿಗಳಿಗೆ ತಿಳಿಸುವಂತೆ ಸೊರೇನ್ ಅವರಿಗೆ ಕೇಳಲಾಗಿದ್ದು, ವಿಚಾರಣೆ ವೇಳೆ ನೀಡುವ ಹೇಳಿಕೆಗಳನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ದಾಖಲಿಸಿಕೊಳ್ಳಲಾಗುತ್ತದೆ ಎಂದೂ ತಿಳಿಸಲಾಗಿದೆ.
ಡಿಸೆಂಬರ್ 31ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಪಿಎಂಎಲ್ಎ ಅನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಎಚ್ಚರಿಸಿದೆ.
ಜಾರಿ ನಿರ್ದೇಶನಾಲಯವು ಸೊರೇನ್ ಅವರಿಗೆ ಕಳುಹಿಸಿದ ಏಳನೇ ನೋಟಿಸ್ ಅಥವಾ ಸಮನ್ಸ್ ಇದು. ಆದಾಗ್ಯೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಆಗಸ್ಟ್ 14ರಂದು ಮೊದಲ ಸಮನ್ಸ್ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಹಾಗೂ ಹೈಕೋರ್ಟ್ ಮೆಟ್ಟಿಲೀರಿದ್ದರು.