ನವದೆಹಲಿ: ಮುಸ್ಲಿಂ ವಿದ್ಯಾರ್ಥಿಯ ಕಪಾಳಕ್ಕೆ ಸಹಪಾಠಿಗಳಿಂದ ಹೊಡೆಸಿದ್ದ ಪ್ರಕರಣದಲ್ಲಿ, ಸಹಪಾಠಿ ವಿದ್ಯಾರ್ಥಿಗಳಿಗೆ ಆಯೋಜಿಸಲಿರುವ ಆಪ್ತಸಮಾಲೋಚನೆ ಕಾರ್ಯಾಗಾರ ಕುರಿತಂತೆ ಏಪ್ರಿಲ್ ಅಂತ್ಯದೊಳಗೆ ಸಮರ್ಪಕವಾದ ಪ್ರಮಾಣಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿದೆ.
ವಿದ್ಯಾರ್ಥಿಗಳಿಗೆ ಏಪ್ರಿಲ್ 24ರವರೆಗೂ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಶಿಕ್ಷಣ ಇಲಾಖೆಯ ಸಲ್ಲಿಸಿದ್ದ ಪ್ರಮಾಣಪತ್ರವನ್ನು ಪರಿಗಣಿಸಿದ ನ್ಯಾಯಪೀಠ ಈ ಕುರಿತ ನಿರ್ದೇಶನವನ್ನು ನೀಡಿತು.
ಈ ಸಂಬಂಧ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ನ್ಯಾಯಪೀಠವು, ಮುಂದಿನ ವಿಚಾರಣೆಯನ್ನು ಏಪ್ರಿಲ್ 15ಕ್ಕೆ ನಿಗದಿಪಡಿಸಿತು.
ಹಿಂದೆ ಫೆ.9ರಂದು ವಿಚಾರಣೆಯ ವೇಳೆ, ಶಿಕ್ಷಕಿಯ ಸೂಚನೆ ಮೇರೆಗೆ ಸಹಪಾಠಿ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಕ್ಕೆ ಹೊಡೆದಿದ್ದ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ನಡೆಸದ ಸರ್ಕಾರದ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡಿತ್ತು.
ಈ ಪ್ರಕರಣಲ್ಲಿ ಕೌನ್ಸೆಲಿಂಗ್ ನಡೆಸಬೇಕಾದ ತುರ್ತು ಇದೆ. ಸರ್ಕಾರ ಈ ಕುರಿತು ಟಾಟಾ ಸಾಮಾಜಿಕ ವಿಜ್ಞಾನ ಸಂಸ್ಥೆಯ ಸಲಹೆಗಳನ್ನು ಪರಿಗಣಿಸಿ, ಕ್ರಮವಹಿಸಬೇಕು ಎಂದು ಸಲಹೆ ಮಾಡಿತ್ತು.