ಪುಣೆ: ‘ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರ ಬಂಧನವು ರಾಜಕೀಯ ಪ್ರೇರಿತವಾದದ್ದು, ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರೊಂದಿಗೆ ನಂಟು ಹೊಂದಿದ್ದಾರೆಂದು ಆರೋಪಿಸಲಾಗುತ್ತಿದೆ’ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.
ನವಾಬ್ ಮಲಿಕ್ ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯವನ್ನು ತಳ್ಳಿ ಹಾಕಿದ ಅವರು, ‘ಮುಸ್ಲಿಂ ಎನ್ನುವ ಕಾರಣಕ್ಕಾಗಿಯೇ ಮಲಿಕ್ ಮತ್ತು ಅವರ ಕುಟುಂಬದ ಸದಸ್ಯರಿಗೆ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಲಾಗುತ್ತಿದೆ. ಆದರೆ ಇದರ ವಿರುದ್ಧ ನಾವು ಹೋರಾಡುತ್ತೇವೆ’ ಎಂದರು.
‘ಮಲಿಕ್ ಅವರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸುತ್ತಿದೆಯೆಲ್ಲ’ ಎನ್ನುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ‘ಬಿಜೆಪಿಗೆ ಸೇರಿದ ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಮಲಿಕ್ ಬಗ್ಗೆ ವಿಭಿನ್ನ ಮಾನದಂಡಗಳನ್ನು ಅನ್ವಯಿಸಲಾಗುತ್ತಿದೆ’ ಎಂದು ಶರದ್ ಉತ್ತರಿಸಿದರು.