ಬಿಜಾಪುರ (ಛತ್ತೀಸ್ಗಢ): ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೈರಮ್ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಕೇಶ್ಕುತುಲ್ ಗ್ರಾಮದ ಬಳಿಯ ಅರಣ್ಯದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ರಾಜ್ಯ ರಾಜಧಾನಿ ರಾಯ್ಪುರದಿಂದ 400 ಕಿ.ಮೀ. ದೂರದಲ್ಲಿರುವ ಕೇಶ್ಕುತುಲ್-ಕೇಶ್ಮುಂಡಿ ಅರಣ್ಯದಲ್ಲಿ ಮಾವೋವಾದಿ ಕಮಾಂಡರ್ ಕವಾಸಿ ಪಂಡರು ಮತ್ತು 15-20 ಮಂದಿಯ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಎನ್ಕೌಂಟರ್ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿದೆ ಎಂದೂ ಅವರು ಹೇಳಿದ್ದಾರೆ.
ಛತ್ತೀಸ್ಗಢದಲ್ಲಿ ಈ ವರ್ಷ ಇದುವರೆಗೆ 80 ನಕ್ಸಲರ ಹತ್ಯೆಯಾಗಿದೆ. ಏಪ್ರಿಲ್ 16ರಂದು ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು 29 ಮಂದಿ ನಕ್ಸಲರನ್ನು ಹತ್ಯೆ ಮಾಡಿವೆ.