’ನಾನು ನರೇಂದ್ರ ಮೋದಿ ಪೋಟೋ ಬಳಕೆ ಮಾಡಬಾರದು ಎಂದು ಹೇಳುವ ಬಿಜೆಪಿಯವರು ಯಡಿಯೂರಪ್ಪ, ರಾಘವೇಂದ್ರ ಮತ್ತು ವಿಜಯೇಂದ್ರ ಅವರ ಫೋಟೋ ಇಟ್ಟುಕೊಂಡು ಹೋಗಿ ಚುನಾವಣೆ ಗೆದ್ದು ತೋರಿಸಲಿ ನೋಡೋಣ‘ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು. ಶಿವಮೊಗ್ಗದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಕೆಲವು ಶಕ್ತಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿವೆ. ಹೀಗಾಗಿ ಕಾರ್ಯಕರ್ತರಲ್ಲಿ ಇನ್ನೂ ಗೊಂದಲವಿದೆ. ಸ್ಪರ್ಧೆಯಿಂದ ಹಿಂದೆ ಸರಿಯಬಹುದು ಎಂಬ ಆತಂಕವಿದೆ. ಸೋಲಿನ ಭಯದಿಂದ ವಿರೋಧಿಗಳು ಗೊಂದಲ ಸೃಷ್ಟಿಸುತ್ತಿದ್ದಾರೆ. ಯಾವ ಕಾರಣಕ್ಕೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನ್ನನ್ನು ನಂಬಿಕೊಂಡವರನ್ನು ನಡು ನೀರಲ್ಲಿ ಕೈ ಬಿಡಲ್ಲ’ ಎಂದು ಸ್ಪಷ್ಟಪಡಿಸಿದರು.