ನವದೆಹಲಿ: ನಿಜಾಮಾಬಾದ್ನಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ದ ಕಾರ್ಯಕರ್ತನನ್ನು ಎನ್ಐಎ ಶನಿವಾರ ಬಂಧಿಸಿದೆ.
ಪಿಎಫ್ಐನ ತೆಲಂಗಾಣ ಉತ್ತರದ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲೀಂ ಬಂಧಿತ ಆರೋಪಿ. ಆತ ಈ ಪ್ರಕರಣದಲ್ಲಿ 15ನೇ ಆರೋಪಿಯಾಗಿದ್ದಾನೆ. ನಿಜಾಮಾಬಾದ್ ಭಯೋತ್ಪಾದನೆಗೆ ಸಂಚು ಪ್ರಕರಣ ಸಂಬಂಧ 2022ರ ಜುಲೈನಲ್ಲಿ ನಿಜಾಮಾಬಾದ್ ಪೊಲೀಸ್ ಠಾಣೆಯಲ್ಲಿ ತೆಲಂಗಾಣ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಬಳಿಕ ಆಗಸ್ಟ್ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು.
2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವುದು ಈ ಸಂಘಟನೆಯ ಉದ್ದೇಶವಾಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ಅಬ್ದುಲ್ ಸಲೀಂ ಪರಾರಿಯಾಗಿದ್ದ. ಬಳಿಕ ಎನ್ಐಎ ಆತನ ಪತ್ತೆಗಾಗಿ ₹2 ಲಕ್ಷ ಬಹುಮಾನವನ್ನು ಘೋಷಿಸಿತ್ತು.
ಗುಪ್ತಚರ ಇಲಾಖೆಯ ನೇತೃತ್ವದ ಕಾರ್ಯಾಚರಣೆಯಲ್ಲಿ ಆಂಧ್ರಪ್ರದೇಶದ ಕಡಪ್ಪ ಜಿಲ್ಲೆಯ ಮೈದುಕೂರಿನಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2022ರ ಡಿಸೆಂಬರ್ನಲ್ಲಿ ಅಬ್ದುಲ್ ಸಲೀಂ ಸೇರಿದಂತೆ 11 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿತ್ತು.