ಫತೇಘರ್ ಸಾಹಿಬ್ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಅಮರ್ ಸಿಂಗ್ ಅವರ ಪರ ಮತಯಾಚಿಸಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅಧಿಕಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಮತ್ತು ಪೊಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ದೇಶದಲ್ಲಿ ಸುಮಾರು 70 ಕೋಟಿ ಯುವಜನತೆಯು ನಿರುದ್ಯೋಗಿಗಳಾಗಿದ್ದಾರೆ ಮತ್ತು ಕಳೆದ 45 ವರ್ಷಗಳಲ್ಲಿ ನಿರುದ್ಯೋಗವು ಹೆಚ್ಚಿದೆ. ಮೋದಿ ಅವರ ಆಡಳಿತದಲ್ಲಿ ಸರ್ಕಾರಿ ವಲಯದಲ್ಲಿ ಸುಮಾರು 30 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ದೇಶದ ಆರ್ಥಿಕತೆ ಕ್ಷಿಪ್ರಗತಿಯಲ್ಲಿ ಬೆಳೆಯುತ್ತಿದೆ ಎಂದು ಮೋದಿ ಅವರು ಸಮರ್ಥಿಸಿಕೊಳ್ಳುತ್ತಾರೆ. ಹಣದುಬ್ಬರವು ವಿಪರೀತ ಏರಿಕೆ ಆಗಿರುವುದು ಏಕೆ? ದೇಶವು ತ್ವರಿತಗತಿಯಲ್ಲಿ ಅಭಿವೃದ್ಧಿ ಆಗುತ್ತಿದ್ದರೆ, ಉಕ್ಕಿನ ಘಟಕಗಳು ಏಕೆ ಬಾಗಿಲು ಮುಚ್ಚುತ್ತಿವೆ? ಜಿಎಸ್ಟಿ ಹೇರಿಕೆಯಿಂದ ಉದ್ಯಮ ವಲಯಕ್ಕೆ ಪೆಟ್ಟು ಬಿದ್ದಿದ್ದು ಏಕೆ? ಮಧ್ಯಮ ವರ್ಗಕ್ಕೆ ಒಂದೂ ಯೋಜನೆ ಇಲ್ಲ ಏಕೆ ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
ಪ್ರಗತಿಯನ್ನು ಟಿವಿಯಲ್ಲಿ ಮಾತ್ರ ನೋಡಲಾಗುತ್ತಿದೆಯೇ ಹೊರತು ಜನರ ಜೀವನದಲ್ಲಿ ಯಾವುದೇ ಪ್ರಗತಿ ಕಾಣಿಸುತ್ತಿಲ್ಲ. ಸಾರ್ವಜನಿಕರನ್ನು ಬಿಜೆಪಿ ಗೌರವಿಸುತ್ತಿಲ್ಲ. ಜನರ ಸಮಸ್ಯೆಗಳ ಬಗ್ಗೆ ಅವರು ಮಾತನಾಡುವುದಿಲ್ಲ. ಹಣದುಬ್ಬರವನ್ನು ತಗ್ಗಿಸಲು ಮತ್ತು ನಿರುದ್ಯೋಗವನ್ನು ಕಡಿಮೆಗೊಳಿಸಲು ಸರ್ಕಾರ ಏನು ಕ್ರಮ ಕೈಗೊಳ್ಳುತ್ತಿದೆ ಎಂಬುವುದನ್ನು ಅವರು ಹೇಳುವುದಿಲ್ಲ. ಸಾರ್ವಜನಿಕರ ಬಗ್ಗೆ ಮಾತನಾಡುವುದು ಕಾಂಗ್ರೆಸ್ ಮಾತ್ರ ಎಂದು ಪ್ರಿಯಾಂಕಾ ಪ್ರತಿಪಾದಿಸಿದ್ದಾರೆ.
ಪಂಜಾಬ್ನಲ್ಲಿ ಜೂನ್ 1ರಂದು ಮತದಾನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.