ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಚುನಾವಣಾ ಆಯೋಗ ಬುಧವಾರ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, 30ರಂದು ಪರಿಶೀಲನೆ ನಡೆಯಲಿದೆ. ಜುಲೈ 2 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜುಲೈ 21ರಂದು ಚುನಾವಣೆ ನಡೆಯಲಿದೆ.
ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24ಕ್ಕೆ ಕೊನೆಗೊಳ್ಳುವುದು.
ವಿಪಕ್ಷಗಳ ಸಭೆ: ಒಂದೆಡೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತರೆ, ಇನ್ನೊಂದೆಡೆ, ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಸಭೆ ನವದೆಹಲಿಯಲ್ಲಿ ಬುಧವಾರ ನಡೆಯಿತು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಸಭೆಯನ್ನು ಆಯೋಜಿಸಿದ್ದರು. ಎನ್ಡಿಎ ಅಭ್ಯರ್ಥಿ ವಿರುದ್ಧ ವಿಪಕ್ಷಗಳ ಉಮೇದುವಾರರೊಬ್ಬರನ್ನು ಕಣಕ್ಕಿಳಿಸುವ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.