ಭುವನೇಶ್ವರ: ಬಿಜೆಡಿಯಿಂದ ಉಚ್ಚಾಟನೆಗೊಂಡಿದ್ದ ಶಾಸಕ ಹಾಗೂ ಮಾಜಿ ಸಚಿವ ಪ್ರದೀಪಕುಮಾರ್ ಪಾಣಿಗ್ರಾಹಿ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಗೋಪಾಲಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಮಲ ಪಾಳಯ ಸೇರಿದ್ದಾರೆ. ಈ ಹಿಂದೆ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದರು.
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮನಮೋಹನ್ ಸಾಮಲ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಡಿಯನ್ನು ಅಧಿಕಾರದಿಂದ ಕಿತ್ತೊಗೆಯುವುದಾಗಿ ಶಪಥ ಮಾಡಿದರು.
‘ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಸರ್ಕಾರ ‘ದುರಹಂಕಾರಿ ಹಾಗೂ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ’ ಎಂದೂ ಆರೋಪಿಸಿದರು.
ಮಾಜಿ ಐಎಎಸ್ ಅಧಿಕಾರಿ ಹಾಗೂ ಬಿಜೆಡಿ ನಾಯಕ ವಿ.ಕೆ.ಪಾಂಡ್ಯನ್ ಅವರ ಕಡು ಟೀಕಾಕಾರಾಗಿರುವ ಪಾಣಿಗ್ರಾಹಿ ಅವರನ್ನು 2020ರಲ್ಲಿ ಪಕ್ಷದಿಂದ ಉಚ್ಚಾಟಿಸಲಾಗಿತ್ತು.