ಸಂಬಲ್ಪುರ(ಒಡಿಶಾ): ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಮುಂಜಾನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬೊಲೆರೊ ಕಾರು ಆಯ ತಪ್ಪಿ ಪರಮನ್ಪುರ ಬಳಿ ಘಾಮ್ ಕಾಲುವೆಗೆ ಬಿದ್ದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾರಿನಲ್ಲಿದ್ದವರು ಪರಮನ್ಪುರದಲ್ಲಿ ಮದುವೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಂಡು ಮರಳುತ್ತಿದ್ದರು. ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರೂ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಸಂಬಲ್ಪುರ ಜಿಲ್ಲಾಧಿಕಾರಿ ಅನನ್ಯ ದಾಸ್ ಪಿಟಿಐ ಸುದ್ಧಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
ಮೃತರನ್ನು ಸುಬಲಾ ಭೋಯ್, ಸುಮಂತ್ ಭೋಯ್, ಸರಾಜ್ ಸೇಠ್, ದಿಬ್ಯಾ ಲೋಹಾ, ಅಜಿತ್ ಖಮಾರಿ, ರಮಾಕಾಂತ್ ಭುನ್ಯಾರ್ ಮತ್ತು ಶತ್ರುಘ್ನ ಭೋಯ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ದಾಸ್ ಹೇಳಿದ್ದಾರೆ.