ಭುವನೇಶ್ವರ: ಐಐಎಂ– ಸಂಬಲ್ಪುರ ಹೊಸ ಕ್ಯಾಂಪಸ್ ಸೇರಿದಂತೆ ಒಡಿಶಾದಲ್ಲಿ ಸುಮಾರು ₹68,400 ಕೋಟಿ ಮೊತ್ತದ ವಿವಿಧ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಚಾಲನೆ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಒಡಿಶಾದ ವೀರ್ ಸುರೇಂದ್ರ ಸಾಯಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿದ್ದಾರೆ.
ಐಐಎಂ-ಸಂಬಲ್ಪುರ ಕ್ಯಾಂಪಸ್ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಗವರ್ನರ್ ರಘುಬರ್ ದಾಸ್ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಹ ಭಾಗವಹಿಸಲಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.
₹400 ಕೋಟಿ ಮೊತ್ತದ ಐಐಎಂ-ಸಂಬಲ್ಪುರ ಹೊಸ ಕ್ಯಾಂಪಸ್, ಹಾಗೂ ₹68,000 ಕೋಟಿ ಮೊತ್ತದ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಮೋದಿ ಚಾಲನೆ ಹಾಗೂ ಕೆಲ ಯೋಜನೆಗಳಿಗೆ ಶಂಕುಸ್ಢಾಪನೆಯನ್ನೂ ನೆರವೇರಿಸಲಿದ್ದಾರೆ. ಬಳಿಕ ಸಂಬಲ್ಪುರದ ರೆಮೆಡ್ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಗುವಾಹಟಿಗೆ ತೆರಳಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆ ನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ