ಬಾಲಸೋರ್/ಭುವನೇಶ್ವರ: ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದ ಸಮೀಪ ಶುಕ್ರವಾರ ರಾತ್ರಿ ಸಂಭವಿಸಿದ ಮೂರು ರೈಲುಗಳನ್ನು ಒಳಗೊಂಡ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಬಾಲಸೋರ್ ಜಿಲ್ಲಾ ಆಸ್ಪತ್ರೆ ಹಾಗೂ ಇತರ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ದಾಖಲಿಸಿದ್ದು, ಸಾವಿನ ಸಂಖ್ಯೆ ಹೆಚ್ಚು ಸಾಧ್ಯತೆ ಇದೆ.
‘ಗಾಯಗೊಂಡವರನ್ನು ರಕ್ಷಿಸುವ ಕಾರ್ಯ ಪೂರ್ಣಗೊಂಡಿದೆ’ ಎಂದು ಆಗ್ನೇಯ ರೈಲ್ವೆ ವಕ್ತಾರ ಆದಿತ್ಯ ಚೌಧರಿ ಹೇಳಿದ್ದಾರೆ.
‘ಆಗ್ನೇಯ ರೈಲ್ವೆಯ ರೈಲ್ವೆ ಸುರಕ್ಷತಾ ಆಯುಕ್ತ (ಆಗ್ನೇಯ ವೃತ್ತ) ಎ.ಎಂ.ಚೌಧರಿ ನೇತೃತ್ವದ ಸಮಿತಿಯಿಂದ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ’ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಬೆಂಗಳೂರು– ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಕೋರೊಮಂಡಲ್ ಎಕ್ಸ್ಪ್ರೆಸ್ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಾದ ಸಾವು– ನೋವಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ರಾಜ್ಯದಲ್ಲಿ ಶನಿವಾರ ಶೋಕಾಚರಣೆ ಘೋಷಿಸಿದ್ದರು.
‘ರಕ್ಷಣಾ ಕಾರ್ಯದಲ್ಲಿ ಎನ್ಡಿಆರ್ಎಫ್, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ (ಒಡಿಆರ್ಎಎಫ್), ಅಗ್ನಿಶಾಮಕ ದಳ ಸಿಬ್ಬಂದಿ ತೊಡಗಿದ್ದು, ರೈಲು ಬೋಗಿಗಳಡಿ ಸಿಲುಕಿರುವವರನ್ನು ರಕ್ಷಿಸುವ ಹಾಗೂ ಮೃತದೇಹಗಳನ್ನು ಹೊರಗೆ ತೆಗೆಯುವ ಕಾರ್ಯ ಶನಿವಾರದವರೆಗೆ ನಡೆಯಿತು’ ಎಂದು ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ಕೆ.ಜೇನಾ ತಿಳಿಸಿದ್ದಾರೆ.
ನೆರೆಯ ಪಶ್ಚಿಮ ಬಂಗಾಳದ ಬ್ಯಾರಕ್ಪುರ ಹಾಗೂ ಪನಾಗಢದಿಂದ ಬಂದಿರುವ, ಸೇನೆಯ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ತಂಡಗಳನ್ನು ರಕ್ಷಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಸಲುವಾಗಿ ಎರಡು ಎಂಐ–17 ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಸವಾಲಿನ ರಕ್ಷಣಾ ಕಾರ್ಯ:
ಅಪಘಾತದಿಂದಾಗಿ ಹಳಿಗಳಿಂದ ತುಸು ದೂರ ಬಿದ್ದಿರುವ ಬೋಗಿಗಳನ್ನು ಎತ್ತುವುದು ಹಾಗೂ ಅದರಡಿ ಸಿಲುಕಿರುವವರ ರಕ್ಷಣೆಯೇ ಸವಾಲಿನದಾಗಿತ್ತು. ಈ ಕಾರ್ಯದಲ್ಲಿ ದೊಡ್ಡ ಕ್ರೇನ್ಗಳು ಹಾಗೂ ಬುಲ್ಡೋಜರ್ಗಳನ್ನು ಬಳಸಲಾಗಿದೆ.
ಹಳಿ ತಪ್ಪಿ, ಉರುಳಿ ಬಿದ್ದಿದ್ದ ಬೋಗಿಗಳ ಕಿಟಕಿ, ಬಾಗಿಲು ಸೇರಿ ಇತರ ಭಾಗಗಳನ್ನು ‘ಗ್ಯಾಸ್ ಕಟರ್’ಗಳ ಮೂಲಕ ಕತ್ತರಿಸಿ, ಅಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.