ನವದೆಹಲಿ: 12ನೇ ತರಗತಿಯ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸಲು ಅನುಸರಿಸುವ ಮೌಲ್ಯಮಾಪನ ವಿಧಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಸಿಬಿಎಸ್ಇ ಮತ್ತು ಐಸಿಎಸ್ಇಗೆ ಸುಪ್ರೀಂ ಕೋರ್ಟ್ ಸೋಮವಾರ ಸೂಚಿಸಿದೆ.
ಸಿಬಿಎಸ್ಇ ಮತ್ತು ಐಸಿಎಸ್ಇಯ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟಿಸಲು ಅನುಸರಿಸುವ ಮೌಲ್ಯಮಾಪನ ವಿಧಾನದ ಬಗ್ಗೆ ಕೆಲವು ವಿದ್ಯಾರ್ಥಿಗಳು ಮತ್ತುಪೋಷಕರ ಸಂಘಗಳು ಆತಂಕ ವ್ಯಕ್ತಪಡಿಸಿವೆ. ಈ ವಿಧಾನದಲ್ಲಿರುವ ಅನೇಕ ಷರತ್ತುಗಳು ಏಕಪಕ್ಷೀಯ ಮತ್ತು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಕಾರಕವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಕೆ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರ ಪೀಠವು ಮುಂದಿನ ವಿಚಾರಣೆಯನ್ನು ಮಂಗಳವಾರ ನಿಗದಿ ಮಾಡಿದ್ದು, ಈ ವೇಳೆ ಸಿಬಿಎಸ್ಇ ಮತ್ತು ಐಸಿಎಸ್ಇ ಗಳ ಪ್ರತಿಕ್ರಿಯೆಗಳನ್ನು ಆಲಿಸಲಿದೆ.
‘ಮೌಲ್ಯಮಾಪನ ವಿಧಾನದ ಬಗ್ಗೆ ಹಲವಾರು ಗೊಂದಲಗಳಿವೆ. ಏನು ನಡೆಯುತ್ತಿದೆ ಎಂಬುದರ ಬಗ್ಗೆ ಯಾರಿಗೂ ಸರಿಯಾಗಿ ತಿಳಿದಿಲ್ಲ’ ಎಂದುಉತ್ತರ ಪ್ರದೇಶ ಪೋಷಕರ ಸಂಘದ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲ ವಿಕಾಸ್ ಸಿಂಗ್ ಅವರು ತಿಳಿಸಿದರು.