ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನು ಸಂಸತ್ತು ಅಂಗೀಕರಿಸಿದೆ. ರಾಜಸಭೆಯು ಈ ಮಸೂದೆಗಳನ್ನು ಸೋಮವಾರ ಧ್ವನಿಮತದಿಂದ ಅಂಗೀಕರಿಸಿತು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಭಯೋತ್ಪಾದನೆಯಿಂದ ಮುಕ್ತವಾದ ‘ಹೊಸ ಮತ್ತು ಅಭಿವೃದ್ಧಿ ಕಾಶ್ಮೀರ’ ಅಭಿವೃದ್ಧಿಪಡಿಸುವ ಕಾರ್ಯ ಆರಂಭವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಸದನಕ್ಕೆ ಭರವಸೆ ನೀಡಿದರು.
ಶಾ ಉತ್ತರ ನೀಡುತ್ತಿದ್ದಾಗಲೇ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದವು. ಜಮ್ಮು–ಕಾಶ್ಮೀರ ಪುನರ್ವಿಂಗಡಣೆ (ತಿದ್ದುಪಡಿ) ಮಸೂದೆ ಹಾಗೂ ಜಮ್ಮು–ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ ಅನ್ನು ಕಳೆದ ವಾರ ಮಂಡಿಸಲಾಗಿತ್ತು.