ನವದೆಹಲಿ: ಸಂಸತ್ನ ಮುಂಗಾರು ಅಧಿವೇಶನ ಜುಲೈ 20 ರಿಂದ ಆಗಸ್ಟ್ 11 ರವರೆಗೆ ನಡೆಯಲಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ‘ರಚನಾತ್ಮಕ ಚರ್ಚೆಗೆ ಎಲ್ಲ ರಾಜಕೀಯ ಪಕ್ಷಗಳು ಸಹಕಾರ ನೀಡಬೇಕು‘ ಎಂದು ಮನವಿ ಮಾಡಿದ್ದಾರೆ.
ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಬಲವಾಗಿ ಪ್ರತಿಪಾದಿಸುತ್ತಿದ್ದಾರೆ. ಈ ಕುರಿತು ವ್ಯಾಪಕ ಸಮಾಲೋಚನೆಗೂ ಚಾಲನೆ ನೀಡಲಾಗಿದೆ.
ಇನ್ನೊಂದೆಡೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳಿಂದ ಪ್ರಯತ್ನಗಳು ಮುಂದುವರಿದಿವೆ. ಈ ಎಲ್ಲ ಕಾರಣಗಳಿಂದಾಗಿ ಈ ಮುಂಗಾರು ಅಧಿವೇಶನವು ಕಾವೇರಿದ ಚರ್ಚೆಗಳಿಂದ ಕೂಡಿರುವ ಸಾಧ್ಯತೆ ಇದೆ.
ಅಧಿವೇಶನದಲ್ಲಿ ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ದೆಹಲಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆಯನ್ನು ಬದಲಾಯಿಸಲು ಸರ್ಕಾರವು ಹೊಸ ಮಸೂದೆ ಮಂಡಿಸುವ ಸಾಧ್ಯತೆಯೂ ಇದೆ.
ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಈ ಸುಗ್ರೀವಾಜ್ಞೆ ರದ್ದುಪಡಿಸಿತ್ತು.
ಹಳೆ ಸಂಸತ್ ಭವನದಲ್ಲಿಯೇ ಅಧಿವೇಶನಕ್ಕೆ ಚಾಲನೆ ನೀಡಿ, ನಂತರ ಹೊಸ ಭವನಕ್ಕೆ ಸ್ಥಳಾಂತರಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಸಂಪುಟ ಅನುಮೋದಿಸಿದ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ ಮಂಡಿಸುವ ಸಾಧ್ಯತೆಯೂ ಇದೆ.
ಬಹು ರಾಜ್ಯ ಸಹಕಾರ ಸಂಘಗಳ ಕಾನೂನು ತಿದ್ದುಪಡಿ: ಶಾ
ನವದೆಹಲಿ: ಬಹು ರಾಜ್ಯ ಸಹಕಾರ ಸಂಘಗಳ ಕಾಯ್ದೆಗೆ ತಿದ್ದುಪಡಿ ತರುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಸಹಕಾರ ಸಚಿವರೂ ಆಗಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಐಇಸಿಸಿ) ನಡೆದ 17ನೇ ಭಾರತೀಯ ಸಹಕಾರ ಕಾಂಗ್ರೆಸ್ ಉದ್ದೇಶಿಸಿ ಅವರು ಮಾತನಾಡಿದರು.
संसद का मानसून सत्र, 2023 आगामी 20 जुलाई से शुरू होकर 11 अगस्त तक चलेगा। 23 दिन तक चलने वाले इस सत्र में कुल 17 बैठकें होंगी। मैं सभी पार्टियों से सत्र के दौरान संसद के विधायी और अन्य काम-काज में रचनात्मक योगदान देने की अपील करता हूं।
— Pralhad Joshi (@JoshiPralhad) July 1, 2023
ಏಕರೂಪ ನಾಗರಿಕ ಸಂಹಿತೆ (ಯುಸಿಸಿ), ಮಣಿಪುರ ಹಿಂಸಾಚಾರ ಮತ್ತು ದೆಹಲಿಯ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತು ಕೇಂದ್ರ ಸರ್ಕಾರ ತಂದಿರುವ ಸುಗ್ರೀವಾಜ್ಞೆ ಕುರಿತಾದ ವಿಚಾರಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳು ಸಿದ್ಧವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.