ನಾಗ್ಪುರ: ಜನರ ಮನಸ್ಥಿತಿ ಬದಲಾಗಿದೆ ಹಾಗೂ ಈ ಬೆಳವಣಿಗೆ ಮೋದಿ ವಿರುದ್ಧವಾಗಿದೆ ಎಂದು ಎನ್ಸಿಪಿ(ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂಬುದರ ಬಗ್ಗೆ ಆಲೋಚನೆ ಇಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜನರ ಮನಸ್ಥಿತಿ ಬದಲಾಗಿದೆ. ಇದನ್ನು ನಾನು ಸ್ಪಷ್ಟವಾಗಿ ನೋಡುತ್ತಿದ್ದೇನೆ ಎಂದರು.
ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ದಾಳಿ ನಡೆಸಲಾಗುತ್ತಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಶರದ್, ಬೆಳ್ಳೆಯ ಬೆಳವಣಿಗೆ ಎಂದರು.
ಚುನಾವಣೆಯ ಸಂದರ್ಭದಲ್ಲಿ ಎನ್ಸಿಪಿ ವಿಭಜನೆಯು ತಮ್ಮ ಬಣದ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಪವಾರ್, ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳಿಗೆ ಜನರು ಮತ ಹಾಕುತ್ತಾರೆ ಎಂದರು.
ಲೋಕಸಭಾ ಚುನಾವಣಾ ಸೀಟು ಹಂಚಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಜೋತಿಷಿಯಲ್ಲ ಎಂದರು. ಹಾಗೂ ನಿಮ್ಮ ಪುತ್ರಿ ಸುಪ್ರಿಯಾ ಸುಳೆ ಅವರು ಬಾರಾಮತಿಯಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತಾರೆಯೇ ಎಂದು ಕೇಳಿದಾಗ, 'ಮತದಾನ ಇನ್ನೂ ನಡೆಯಬೇಕಿದೆ' ಎಂದರು.
ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾ ಏಕಪಕ್ಷೀಯವಾಗಿ ಮರುನಾಮಕರಣ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶರದ್, ರಾಷ್ಟ್ರೀಯ ಹಿತಾಸಕ್ತಿಗಳನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ ಎಂದರು.