ಕೃಷ್ಣನಗರ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ ಶನಿವಾರ ಮಹತ್ವದ ಸಭೆ ನಡೆಸಿದ್ದಾರೆ.
ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಈ ಸಭೆ ಸುಮಾರು 16 ನಿಮಿಷಗಳ ಕಾಲ ನಡೆಯಿತು ಎಂದು ಮಾಧ್ಯಮಗಳು ವರದಿ ಮಾಡಿವೆ.
ಕೇಂದ್ರದ ಉತ್ತಮ ಕಾರ್ಯಕ್ರಮಗಳನ್ನು ಸಾಮಾನ್ಯ ಜನರಿಗೆ ಹೇಗೆ ತಲುಪಿಸಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು. ತೃಣಮೂಲ ಕಾಂಗ್ರೆಸ್ ದುರಾಡಳಿತದ ವಿರುದ್ಧ ಹೋರಾಡುತ್ತಿರುವ ಬಿಜೆಪಿ ಕಾರ್ಯಕರ್ತರ ಧೈರ್ಯ, ಉತ್ಸಾಹ, ಅವರ ದೃಢವಾದ ಹೋರಾಟವನ್ನು ಪ್ರಶಂಸಿಸುತ್ತೇನೆ. ಹಾಗೂ ನಾವು ಒಟ್ಟಾಗಿ ಪಶ್ಚಿಮ ಬಂಗಾಳದ ಉತ್ತಮ ಭವಿಷ್ಯವನ್ನು ನಿರ್ಮಿಸುತ್ತೇವೆ ಎಂದು ಪ್ರಧಾನಿ ನರೇಂದ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಸಭೆಗೂ ಮುನ್ನ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಮಮತಾ ಬ್ಯಾನರ್ಜಿ ಅವರ ದಬ್ಬಾಳಿಕೆಯನ್ನು ಖಂಡಿಸಿದರು. ಜನರಿಗಾಗಿ ಇರುವ ಕಲ್ಯಾಣ ಕಾರ್ಯಕ್ರಮಗಳನ್ನು ಹಗರಣಗಳನ್ನಾಗಿ ಪರಿವರ್ತಿಸುವಲ್ಲಿ ಟಿಎಂಸಿಯವರು ಜಾಣರು ಎಂದು ಟೀಕಿಸಿದರು.