ವಾರಾಣಸಿ (ಉತ್ತರ ಪ್ರದೇಶ): ಗುರುವಾರ ಸಂಜೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿ ತಲುಪಿದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 11.15ಕ್ಕೆ ಸಂತ ಗುರು ರವಿದಾಸ್ ಜನ್ಮಸ್ಥಳದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಂತ ಗುರು ರವಿದಾಸ್ ಅವರ 647ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ವಾರಾಣಸಿಯಲ್ಲಿ ₹13,000 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಬನಾಸ್ ಡೈರಿ ಉದ್ಘಾಟನೆ:
ಪ್ರಧಾನಿ ಅವರು ಅಮುಲ್ನ ಅತಿದೊಡ್ಡ ಘಟಕ ಬನಾಸ್ ಡೈರಿಯನ್ನು ಉದ್ಘಾಟಿಸಲಿದ್ದಾರೆ. ಈ ಯೋಜನೆಯಿಂದ ಸುಮಾರು 1 ಲಕ್ಷ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಸಿಗಲಿದೆ.
ವಾರಾಣಸಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ (ಎನ್ಐಎಫ್ಟಿ)ಗೆ ಅಡಿಗಲ್ಲು ಹಾಕಲಿದ್ದಾರೆ. ಇದು ಕ್ಷೇತ್ರದ ಶಿಕ್ಷಣ ಮತ್ತು ತರಬೇತಿ ಮೂಲಸೌಕರ್ಯವನ್ನು ಬಲಪಡಿಸುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಅಲ್ಲದೇ ವಾರಾಣಸಿಯಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.