ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಹಂತದ ನಂತರ 400 ಸ್ಥಾನಗಳತ್ತ ಮೋದಿ: ಅಮಿತ್‌ ಶಾ

Published 5 ಮೇ 2024, 14:12 IST
Last Updated 5 ಮೇ 2024, 14:12 IST
ಅಕ್ಷರ ಗಾತ್ರ

ಧರ್ಮಾವರಂ: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು 400 ಸ್ಥಾನಗಳತ್ತ ಮುಂದುವರಿಯಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದರು. 

ಚುನಾವಣೆಯ ಮೊದಲ ಎರಡು ಹಂತಗಳಲ್ಲಿ ಪಕ್ಷವು 100 ಸ್ಥಾನಗಳನ್ನು ದಾಟಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಬಗ್ಗೆ ಲೇವಡಿ ಮಾಡಿದ ಅವರು, ರಾಹುಲ್ ಗಾಂಧಿ ಸೇರಿದಂತೆ ಯಾವ ನಾಯಕನೂ ದೇಶವನ್ನು ಮುನ್ನಡೆಸಲು ಅರ್ಹರಲ್ಲ. ಇಡೀ ದೇಶ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು. 

ಕೇಂದ್ರದಲ್ಲಿ ಎನ್‌ಡಿಎ ಕೂಟವು ಮತ್ತೆ ಅಧಿಕಾರಕ್ಕೆ ಬಂದರೆ ಮುಂದಿನ ಐದು ವರ್ಷಗಳಲ್ಲಿ ‘ಒಂದು ರಾಷ್ಟ್ರ ಒಂದು ಚುನಾವಣೆ’ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು.
ರಾಜನಾಥ್ ಸಿಂಗ್, ಕೇಂದ್ರ ರಕ್ಷಣಾ ಸಚಿವ

ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂನಲ್ಲಿ ಚುನಾವಣಾ ರ್‍ಯಾಲಿ ನಡೆಸಿದ ಅವರು, ಆಂಧ್ರಪ್ರದೇಶದ ವೈಎಸ್ಆರ್‌ ಕಾಂಗ್ರೆಸ್ ಭ್ರಷ್ಟಾಚಾರ ಮತ್ತು ಅಪರಾಧಗಳನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.

ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮತ್ತು ಕೇಂದ್ರದಲ್ಲಿ ಮೋದಿ ಅವರನ್ನು ಅಧಿಕಾರಕ್ಕೆ ತಂದರೆ, ರಾಜ್ಯದ ಜನರ ಮಹತ್ವಾಕಾಂಕ್ಷೆಯ ಪೋಲವರಂ ಯೋಜನೆಯನ್ನು ಎರಡು ವರ್ಷದಲ್ಲಿ ಮುಗಿಸುವುದಾಗಿ ಭರವಸೆ ನೀಡಿದರು.

‘ರಾಹುಲ್ ಹೊಗಳಿಕೆ ಕಳವಳಕಾರಿ’

ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್ ಅವರು ರಾಹುಲ್ ಗಾಂಧಿ ಅವರನ್ನು ಹೊಗಳಿರುವ ವಿಚಾರವು ತೀವ್ರ ಕಳವಳಕಾರಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಹೇಳಿದ್ದಾರೆ.

ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ಅವರು ‘ಭಾರತವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿರುವ ನೆರೆಯ ದೇಶವು ತನ್ನ ನಾಯಕನ ಬಗ್ಗೆ ‘ಆಪಾರ ಪ್ರೀತಿ’ ತೋರುತ್ತಿರುವುದು ಏಕೆ ಎನ್ನುವುದನ್ನು ಕಾಂಗ್ರೆಸ್ ವಿವರಿಸಬೇಕು’ ಎಂದು ಒತ್ತಾಯಿಸಿದರು.

ಕಾಶ್ಮೀರದ ಬಗ್ಗೆಯೂ ಮಾತನಾಡಿದ ಅವರು ‘ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮೇಲಿನ ಹಕ್ಕನ್ನು ಭಾರತ ಎಂದೂ ಬಿಟ್ಟುಕೊಡುವುದಿಲ್ಲ. ಆದರೆ ಬಲ ಪ್ರಯೋಗಿಸಿ ಅದನ್ನು ವಶಪಡಿಸಿಕೊಳ್ಳಬೇಕಾದ ಅಗತ್ಯವೂ ಇಲ್ಲ. ಏಕೆಂದರೆ ಕಾಶ್ಮೀರದಲ್ಲಿ ಆಗುತ್ತಿರುವ ಅಭಿವೃದ್ಧಿಯನ್ನು ನೋಡಿ ಪಿಒಕೆಯ ಜನ ತಾವಾಗಿಯೇ ಭಾರತದ ಭಾಗವಾಗಲು ಮುಂದೆ ಬರುತ್ತಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT