ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆ ಕುರಿತು ನೀಡಿದ್ದ ಹೇಳಿಕೆಗಳ ಕುರಿತು ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ತಮ್ಮ ವಿರುದ್ಧದ ಸಮನ್ಸ್ ರದ್ದುಪಡಿಸುವಂತೆ ಕೋರಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಅರವಿಂದ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಗಳನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹಸ್ಮುಖ್ ಸುಥಾರ್, ವಿಚಾರಣಾ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸುವಂತೆ ಎಎಪಿಯ ಇಬ್ಬರೂ ನಾಯಕರಿಗೆ ಸೂಚಿಸಿದರು.
ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆ ಕುರಿತು ವ್ಯಂಗ್ಯಭರಿತ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಗುಜರಾತ್ ವಿಶ್ವವಿದ್ಯಾಲಯವು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಎಎಪಿ ಮುಖಂಡ ಸಂಜಯ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ನಂತರ, ಇಬ್ಬರ ವಿರುದ್ಧ ಮೆಟ್ರೊಪಾಲಿಟನ್ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
ತಮಗೆ ನೀಡಿದ್ದ ಸಮನ್ಸ್ ಪ್ರಶ್ನಿಸಿ, ಈ ಇಬ್ಬರೂ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸೆಷನ್ಸ್ ಕೋರ್ಟ್, ಸಮನ್ಸ್ ಜಾರಿ ಮಾಡಿದ್ದನ್ನು ಎತ್ತಿ ಹಿಡಿದಿತ್ತು. ನಂತರ ಅವರು, ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದ ಹೈಕೋರ್ಟ್, ಈ ಇಬ್ಬರ ಅರ್ಜಿಗಳನ್ನು ತಿರಸ್ಕರಿಸಿತ್ತು. ಬಳಿಕ, ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಸಹ ಅವರ ಅರ್ಜಿಗಳನ್ನು ತಿರಸ್ಕರಿಸಿತ್ತು.