ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಢದಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಉತ್ತಮ ಆಡಳಿತ ಮತ್ತು ಅಭಿವೃದ್ಧಿಗಾಗಿ ಬಿಜೆಪಿಯೊಂದಿಗೆ ಜನರು ದೃಢವಾಗಿದ್ದಾರೆ ಎಂದು ಸೂಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ ಬಳಿಕ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಜನತಾ ಜನಾರ್ದನನಿಗೆ ನನ್ನ ನಮನ. ಮೂರು ರಾಜ್ಯಗಳ ಜನತೆಯ ಅವಿರತ ಬೆಂಬಲಕ್ಕಾಗಿ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜನರ ಯೋಗಕ್ಷೇಮಕ್ಕಾಗಿ ನಾವು ಶ್ರಮಿಸುತ್ತೇವೆ ಎಂದು ಭರವಸೆ ನೀಡುತ್ತೇನೆ. ಪಕ್ಷಕ್ಕಾಗಿ ಶ್ರಮಿಸುತ್ತಿರುವ ಕಾರ್ಯಕರ್ತರಿಗೆ ವಿಶೇಷ ಧನ್ಯವಾದಗಳು. ಪ್ರತಿಯೊಬ್ಬರೂ ಅನುಕರಣೀಯರು! ಅವರು ಅವಿರತವಾಗಿ ಶ್ರಮಿಸಿದ್ದಾರೆ ಮತ್ತು ನಮ್ಮ ಅಭಿವೃದ್ಧಿಯನ್ನು ಎತ್ತಿ ತೋರಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಕುರಿತು ಎಕ್ಸ್ನಲ್ಲಿ, ’ತೆಲಂಗಾಣದ ಪ್ರೀತಿಯ ಸಹೋದರ ಸಹೋದರಿಯರೆ, ಬಿಜೆಪಿಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ತೆಲಂಗಾಣದೊಂದಿಗಿನ ನಮ್ಮ ಬಂಧ ದೂರಮಾಡಲಾಗದು. ನಮ್ಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಬರೆದಿದ್ದಾರೆ.