ನವದೆಹಲಿ: ಕೃತಕ ಬುದ್ಧಿಮತ್ತೆಯ ದುರುಪಯೋಗ ಮತ್ತು ಡೀಪ್ ಫೇಕ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಸದಾ ಅರಿವು ಹೊಂದಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಶನಿವಾರ ಭೇಟಿ ನೀಡಿದ 2022ನೇ ಸಾಲಿನ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸೈಬರ್ ಅಪರಾಧ, ಮಾದಕ ದ್ರವ್ಯ, ಎಡಪಂಥೀಯ ಉಗ್ರವಾದ ಮತ್ತು ಭಯೋತ್ಪಾದನೆ ಸೇರಿದಂತೆ ಇನ್ನಿತರ ಸವಾಲುಗಳನ್ನು ಪೊಲೀಸ್ ಪಡೆಗಳು ಎದುರಿಸುತ್ತಿವೆ’ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳು ಮತ್ತು ಹೊಸ ತಂತ್ರಜ್ಞಾನದಿಂದಾಗಿ ಸನ್ನಿವೇಶಗಳು ವೇಗವಾಗಿ ಬದಲಾಗುತ್ತಿವೆ. ಕೃತಕ ಬುದ್ಧಿಮತ್ತೆಯನ್ನು ಕ್ರಿಮಿನಲ್ಗಳು ದುರುಪಯೋಗಪಡಿಸಿಕೊಳ್ಳುತ್ತಿರುವುದು ಮತ್ತು ಡೀಪ್ ಫೇಕ್ ರೀತಿಯ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿವೆ. ಪೊಲೀಸ್ ಅಧಿಕಾರಿಗಳು ತಂತ್ರಜ್ಞಾನ ಕ್ಷೇತ್ರದಲ್ಲಿ ಎದುರಾಗುತ್ತಿರುವ ಹೊಸ ಸವಾಲುಗಳನ್ನು ಎದುರಿಸಲು ಸಜ್ಜಾಗುವ ಮೂಲಕ ಕ್ರಿಮಿನಲ್ಗಳು ನಡೆಸುವ ಇಂತಹ ಚಟುವಟಿಕೆಗಳನ್ನು ಹತ್ತಿಕ್ಕಬೇಕು ಎಂದು ತಿಳಿಸಿದರು.
ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಸೃಷ್ಟಿಸಲ್ಪಟ್ಟ ಡೀಪ್ ಫೇಕ್ಗಳು ಸಮಾಜದಲ್ಲಿ ದೊಡ್ಡ ಬಿಕ್ಕಟ್ಟು ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರವಷ್ಟೇ ಕಳವಳ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.